[1]ಬೆಂಗಳೂರು: ರಾಜ್ಯ ವಿಧಾನಸಭೆಗೆ ಮೇ 12ರಂದು ಮತದಾನ ನಡೆಯಲಿದ್ದು, ಈಗಾಗಲೇ ವಿವಿಧ ಪಕ್ಷಗಳು ಮತದಾರ ಪ್ರಭುಗಳ ಓಲೈಕೆಯಲ್ಲಿ ತೊಡಗಿದ್ದು, ಗೆಲುವಿನ ಲೆಕ್ಕಾಚಾರ ಮಾಡುತ್ತಿವೆ.
ಚುನಾವಣೆ ಫಲಿತಾಂಶದ ಬಗ್ಗೆ ಟ್ವಿಟ್ಟರ್ನಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2013ರಲ್ಲಿ ಮತದಾರರು ನಿರ್ಣಯ ಮಾಡಿದಂತೆ ಈ ಬಾರಿಯೂ ರಾಜ್ಯದಲ್ಲಿ ಒಂದೇ ಪಕ್ಷ ಬಹುಮತ ಗಳಿಸಿ ಸರ್ಕಾರ ರಚಿಸುತ್ತದೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ. ಯಾವುದೇ ಒಂದು ಪಕ್ಷ ಕಿಂಗ್ ಮೇಕರ್ ಆಗಲು ಸಾಧ್ಯವೇ ಇಲ್ಲ ಎಂದು ಸಿದ್ದರಾಮಯ್ಯ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವೇ ಈ ಸಲವೂ ಅಧಿಕಾರಕ್ಕೆ ಬರಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಎರಡು ಚುನಾವಣೋತ್ತರ ಸಮೀಕ್ಷೆ ಹೊರಬಂದಿದ್ದು, ಅದರಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ ಎಂಬ ವರದಿ ಸಹ ಅದರಲ್ಲಿ ಸಿಕ್ಕಿದೆ. ಆದರೆ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ. ಈ ಸಮೀಕ್ಷೆಗಳ ಬಗ್ಗೆ ಮಾತನಾಡಿರುವ ಅವರು, ಸಮೀಕ್ಷೆಗಳ ಮಾಹಿತಿಯೇ ನಾನ್ ಸೆನ್ಸ್ ಎಂದು ತಳ್ಳಿ ಹಾಕಿದ್ದಾರೆ.