[1]ಮುಲ್ಕಿ : ಮಿನಿಬಸ್ ಮತ್ತ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ಹೆದ್ದಾರಿ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಬಾಲಕ ಮೃತಪಟ್ಟು ಕುಟುಂಬದ ಸದಸ್ಯರು ಗಾಯಗೊಂಡ ಘಟನೆ ರವಿವಾರ ರಾತ್ರಿ ಮುಲ್ಕಿಯ ಬಪ್ಪನಾಡು ದೇವಸ್ಥಾನದ ಎದುರು ನಡೆದಿದೆ.
ಮೃತ ಬಾಲಕನನ್ನು ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮೆಣಸಗಿ ಗ್ರಾಮದ ನಿವಾಸಿ ರಕ್ಷಿತ್ ಕುಮಾರ್ (12) ಎಂದು ಗುರುತಿಸಲಾಗಿದೆ.
ಮುಲ್ಕಿಯ ಬಪ್ಪನಾಡು ಬಳಿಯ ಅಪಾರ್ಟ್ಮೆಂಟ್ ಒಂದರ ವಾಚ್ ಮ್ಯಾನ್ ಮುತ್ತು ಎಂಬವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮುಲ್ಕಿಯ ಬಪ್ಪನಾಡು ದೇವಸ್ಥಾನದ ಎದುರು ಊರಿಗೆ ಹೋಗಲು ಬಸ್ಸು ಕಾಯುತ್ತಾ ನಿಂತಿದ್ದರು. ದೇವಸ್ಥಾನಕ್ಕೆ ಹೊರಟ್ಟಿದ್ದ ಮಿನಿ ಬಸ್ ಮತ್ತು ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಈ ಸಂದರ್ಭ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಂತಿದ್ದ ತಾಯಿ ಮತ್ತು ಇಬ್ಬರು ಮಕ್ಕಳಿಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಅಪಘಾತದಿಂದ ಬಸ್ ಚಾಲಕ ಹಾಗು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.