[1]ಮಂಗಳೂರು: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಅಮೆಮಾರ್ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.
ಮೃತರನ್ನು ಅಮೆಮಾರಿನ ನಿವಾಸಿ ಫಾರೂಕ್(45) ಎಂದು ಗುರುತಿಸಲಾಗಿದೆ. ಫಾರೂಕ್ ಅವರು ಮಂಗಳೂರು ಬಂದರಿನ ಧಕ್ಕೆಯಲ್ಲಿ ಉದ್ಯೋಗಿಯಾಗಿದ್ದು, ಇಂದು ಮುಂಜಾನೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಹಳಿ ದಾಟುತ್ತಿದ್ದ ವೇಳೆ ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಬಳಿಕ ಇದೇ ದಾರಿಯಲ್ಲಿ ಹೋಗುವವರು ಇವರನ್ನು ಕಂಡು ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಬಂಧುಬಳಗವನ್ನು ಅಗಲಿದ್ದಾರೆ.