ಜೋಡುಪಾಲ ದುರಂತ ಪ್ರದೇಶಕ್ಕೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಭೇಟಿ

11:03 AM, Monday, August 20th, 2018
Share
1 Star2 Stars3 Stars4 Stars5 Stars
(No Ratings Yet)
Loading...

u-t-khaderಮಂಗಳೂರು: ಕೊಡಗು ಜಿಲ್ಲೆಯ ಜೋಡುಪಾಲ ದುರಂತ ಪ್ರದೇಶಕ್ಕೆ ಹಾಗೂ ಸಂತ್ರಸ್ತರು ಆಶ್ರಯ ಪಡೆದಿರುವ ಸ್ಥಳಗಳಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಭೇಟಿ ನೀಡಿದ್ದರು.

ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರೊಂದಿಗೆ ಮೊದಲು ಜೋಡುಪಾಲ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ್ದ ಕಂದಾಯ ಸಚಿವರು, ಘಟನಾ ಸ್ಥಳವನ್ನು ವೀಕ್ಷಿಸಿದರು. ಬಳಿಕ ಸಂತ್ರಸ್ತರು ಆಶ್ರಯ ಪಡೆದಿರುವ ಸಂಪಾಜೆ ಸರ್ಕಾರಿ ಶಾಲೆ, ಕಲ್ಲುಗುಂಡಿ ಸರ್ಕಾರಿ ಶಾಲೆ ಹಾಗೂ ಅರಂತೋಡು ತೆಕ್ಕಿಲ್ ಹಾಲ್ಗೆ ಭೇಟಿ ನೀಡಿದ್ದರು.

ಸಂತ್ರಸ್ತರು ತಂಗಿರುವ ಎಲ್ಲಾ ಕೊಠಡಿಗಳಿಗೂ ಭೇಟಿ ನೀಡಿದ ಸಚಿವ ದೇಶಪಾಂಡೆ, ಅವರ ಅಹವಾಲನ್ನು ಆಲಿಸಿದರು. ಸಂತ್ರಸ್ತರ ವೈದ್ಯಕೀಯ ವ್ಯವಸ್ಥೆ, ಆಹಾರ ತಯಾರಿಕಾ ಕೊಠಡಿಗಳಿಗೂ ಭೇಟಿ ನೀಡಿ ಪರಿಶೀಲಿಸಿದರು.

ಅರಂತೋಡಿನಲ್ಲಿ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವ ದೇಶಪಾಂಡೆ, ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ. ಸಂತ್ರಸ್ತರನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಿ, ಅವರಲ್ಲಿ ನೆಮ್ಮದಿ ಮೂಡಿಸಲಾಗುವುದು. ಅವರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಪರಿಹಾರವನ್ನು ತ್ವರಿತವಾಗಿ ನೀಡಲಾಗುವುದು. ಮನೆ ಕಳೆದುಕೊಂಡವರಿಗೆ ಸುರಕ್ಷಿತ ಜಾಗದಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು ಎಂದರು.

ಸಂತ್ರಸ್ತರಿಗೆ ಆಶ್ರಯತಾಣದಲ್ಲಿ ಉತ್ತಮ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ದೇಶಪಾಂಡೆ, ಸ್ವಯಂಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇವೆ ನೀಡುತ್ತಿದ್ದಾರೆ. ಆಹಾರ ಸಾಮಗ್ರಿಗಳು ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿವೆ. ಇದಕ್ಕಾಗಿ ಜನತೆಯನ್ನು ಅಭಿನಂದಿಸುವುದಾಗಿ ಸಚಿವರು ಹೇಳಿದರು.

ಪರಿಹಾರ ಕಾರ್ಯಗಳಿಗಾಗಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಗೆ 50 ಕೋಟಿ ರೂ. ಹಾಗೂ ಕೊಡಗು ಜಿಲ್ಲೆಗೆ 100 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಅನುದಾನದ ನೆರವು ನೀಡಲಾಗುವುದು ಎಂದು ಸಚಿವ ದೇಶಪಾಂಡೆ ಅಭಯ ನೀಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English