ಮಂಗಳೂರು: ಸರ್ಕಾರಿ ಸ್ವಾಮ್ಯದ ಕಂಪನಿಗಳಿಂದ ಪೂರೈಕೆಯಾಗುವ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳಿಂದ ಅಕ್ರಮವಾಗಿ ಇತರ ಸಿಲಿಂಡರ್ಗಳಿಗೆ ರಿಫಿಲ್ಲಿಂಗ್ ನಡೆಸುತ್ತಿದ್ದ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಾರ ಹಾಗೂ ಜೆಪ್ಪುಮಾರ್ಕೆಟ್ ಪರಿಸರದಲ್ಲಿ ಈ ದಾಳಿ ನಡೆದಿದೆ. ಸರ್ಕಾರಿ ಸ್ವಾಮ್ಯದ ಕಂಪನಿಗಳಿಂದ ಪೂರೈಕೆಯಾಗುವ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳಿಂದ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಇತರ ಸಿಲಿಂಡರ್ಗಳಿಗೆ ರಿಫಿಲ್ಲಿಂಗ್ ನಡೆಸುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಇದನ್ನರಿತು ದಾಳಿ ನಡೆಸಿದಾಗ ಅಕ್ರಮ ದಂಧೆಯಲ್ಲಿ ನಿರತರಾಗಿದ್ದ ಇಬ್ಬರನ್ನು ಬಂಧಿಸಿ ಹಾಗೂ 153 ಸಿಲಿಂಡರ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಶಾಂತ್(42), ಸದಾಶಿವ ರೈ(47) ಬಂಧಿತ ಆರೋಪಿಗಳು. ಬಂಧಿತರಿಂದ 17 ಗ್ಯಾಸ್ ತುಂಬಿದ ಸಿಲಿಂಡರ್ ಹಾಗೂ 136 ಖಾಲಿ ಸಿಲಿಂಡರ್ಗಳು ಹಾಗೂ ಗ್ಯಾಸ್ ರಿಫಿಲ್ಲಿಂಗ್ ಮಾಡುವ ಪಂಪ್ ಹಾಗೂ ಇತರ ಪರಿಕರ, ಒಂದು ಪಿಕ್ಅಪ್ ಜೀಪ್, ಗೂಡ್ಸ್ ಟೆಂಪೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 6,44,400 ರೂ. ಎಂದು ಅಂದಾಜಿಸಲಾಗಿದೆ. ಈ ಅಕ್ರಮ ರಿಫಿಲ್ಲಿಂಗ್ ದಂಧೆಯಲ್ಲಿ ಭಾಗಿಯಾದ ಹರೀಶ್ ಹಾಗೂ ಕೂಸಪ್ಪ ಎಂಬುವರು ದಾಳಿ ವೇಳೆ ತಲೆಮರೆಸಿಕೊಂಡಿದ್ದಾರೆ.
ಮಂಗಳೂರು ನಗರದ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ನಿರ್ದೇಶನದಲ್ಲಿ ಪೊಲೀಸ್ ಉಪ ಆಯುಕ್ತ( ಕಾ ಮತ್ತು ಸು) ಹನುಮಂತ ರಾಯ, ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ, ಇತರೆ ಪೊಲೀಸ್ ಸಿಬ್ಬಂದಿ ಹಾಗೂ ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆಯ ಮಂಗಳೂರು ಆಹಾರ ನಿರೀಕ್ಷಕಿ ಕಮಲಾ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Click this button or press Ctrl+G to toggle between Kannada and English