ವೀರನಾರಾಯಣ ದೇವಾಲಯದಲ್ಲಿ ಸಿಕ್ಕಿದ ರಾಜ ಕುಲಶೇಖರನ ತುಳು ಶಾಸನದಲ್ಲೇನಿದೆ !

2:50 PM, Monday, February 25th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Murugeshiಮಂಗಳೂರು  : ತುಳು ಲಿಪಿ ಮತ್ತು ತುಳು ಭಾಷೆಯಲ್ಲಿ ಬರೆದ ಅತ್ಯಂತ ಪ್ರಾಚೀನ ಶಾಸನ ಮಂಗಳೂರಿನ ಕುಲಶೇಖರದ ಶ್ರೀವೀರನಾರಯಣ ದೇವಾಲಯದಲ್ಲಿ ಪತ್ತೆಯಾಗಿದೆ. ಆಳುಪ ಚಕ್ರವರ್ತಿ 1 ನೇ ಕುಲಶೇಖರನ ಕಾಲದ ಈ ಶಾಸನವನ್ನು ಸಂಪೂರ್ಣವಾಗಿ ತುಳು ಭಾಷೆಯಲ್ಲಿ ರಚಿಸಲ್ಪಟ್ಟಿರುವುದು ತುಳು ಭಾಷೆ ಹಾಗೂ ಸಂಸ್ಕೃತಿಯ ಅಧ್ಯಯನಕ್ಕೆ ಭದ್ರವಾದ ಬುನಾದಿಯನ್ನು ಒದಗಿಸಿದೆ.

ಈ ಶಾಸನ ಶ್ರೀ ಹರಿಯೇ ನಮಃ ಎಂಬ ಒಂದು ಸಾಲಿನ ಪ್ರಾರ್ಥನಾ ಶ್ಲೋಕದೊಂದಿಗೆ ಆರಂಭವಾಗಿದೆ. ನಂತರ ಶಾಸನದಲ್ಲಿ ಸೌರ ಪಂಚಾಗದ ರೀತ್ಯಾ ಕಾಲಮಾನವನ್ನು ಉಲ್ಲೇಖಿಸಲಾಗಿದೆ. ಶಾಸನೋಕ್ತ ವಿವರದ ಪ್ರಕಾರ ಸಕ್ ಪದರಾಡ್ ಅಂದರೆ ಶಕ 12, ಮೇಘ ಮಾಸ, ಕೃಷ್ಣ ಪಕ್ಷ ದಲ್ಲಿ ಧನುಪುಳೇ (9ನೇ ರಾಶಿ) ಅಂದರೆ 9ನೇ ದಿನ ಕಳೆದು ಎಂದು ಅರ್ಥವಿಸಿಕೊಂಡಲ್ಲಿ ಈ ಶಾಸನದ ಕಾಲ ಕ್ರಿ.ಶ. 1159, ಫೆಬ್ರವರಿ 10, ಶನಿವಾರ ಕ್ಕೆ ಸರಿಹೊಂದುತ್ತದೆ. ನಂತರ ಶಾಸನ ಪದಿರಾಡ್ ಊಱ್ ಸೀಮೆಲ ಎಂದು ಉಲ್ಲೇಖಿಸಿದ್ದು, ಈ ದೇವಾಲಯ 12 ಊರುಗಳಿಗೆ ಪಿತೃ ದೇವತೆಯಾಗಿತ್ತೆಂದು ತಿಳಿಸುತ್ತದೆ. ಶಾಸನದ 9 ನೇ ಸಾಲಿನಲ್ಲಿ ಕುಳೆ [ಸೇಖರ] ಲೋಕೋಂತಮಾಂತ ಎಂಬ ಉಲ್ಲೇಖವಿದೆ. ಅಂದರೆ ಭುವನ ಅಥವಾ ಲೋಕ ವಿಖ್ಯಾತ ಕುಲಶೇಖರನೆಂದು, ಆಳುಪ ದೊರೆಯನ್ನು ಕೊಂಡಾಡಲಾಗಿದೆ. ಮುಂದಿನ ಸಾಲುಗಳು ನೆಲದಲ್ಲಿ ಹುಗಿದು ಹೋಗಿವೆ. ಶಾಸನದ ಮೂಲ ಉದ್ದೇಶ ಧರ್ಮಸೇನಜ್ಙ ಎಂಬ ವ್ಯಕ್ತಿ ತಾನು ಮಾಡಿದ ಯಾವುದೋ ಪಾಪಕ್ಕೆ ಪ್ರಾಯಶ್ಚಿತ್ತವನ್ನು ಮಾಡಿಕೊಂಡದ್ದನ್ನು ದಾಖಲಿಸುವುದು ಶಾಸನದ ಮೂಲ ಉದ್ದೇಶವಾಗಿದೆ.

ಕುಲಶೇಖರ ಶ್ರೀ ವೀರನಾರಾಯಣ ದೇವಾಲಯ – ಶಾಸನ ಪಾಠ
(ತುಳು ಲಿಪಿ, ತುಳು ಭಾಷೆ,)
1. ಶ್ರೀ ಹರಿಯೆ ನಮಃ?
2. ಧನುಪುಳೇ ಮೇಘಮಾಸ (ಕೃಷ್ಣ?)
3. ಪಕ್ಷ ಸಂದು ಧರ್ಮಸೇನ
4. ಜ್ಞ ವದರೋಹಪರಾಧ
5. ರತ್ನತೆಂದ್ ಇಂಚಸ್ಟ್ ಉದ್‌ಬ
6. ಸಕ್ ಪದರಾಡ್ ಪದಿರಾಡ್ (ಊಱ್?)
7. ಸೀದೆ (ಮೆ)ಲ ಸೆದ್ಧವಾದ (ಸಪ್ತಪಾದ) ಮೂಲತೋಗ್ರ
8. ವ್ರಣೋಳವ ಋಕ್ಕಾಲ ದಿಕ್ಕ್
9. ಕುಳೆ[ಸೇಖರ] ಲೋಕೊಂತಮಾಂತ

ಶಾಸನದ ಮಹತ್ವ :
ಶಾಸನ ಆಳುಪರ ಚರಿತ್ರೆ ಮತ್ತು ತುಳು ಸಾಹಿತ್ಯ ಹಾಗೂ ತುಳು ಲಿಪಿ ಅಧ್ಯಯನದ ದೃಷ್ಠಿಯಿಂದ ಅತ್ಯಂತ ಮಹತ್ವದ ದಾಖಲೆಯಾಗಿದೆ. ಈ ಶಾಸನ 1 ನೇ ಕುಲಶೇಖರ ಆಳುಪೇಂದ್ರನ ಕುರಿತಾಗಿ ದೊರೆಯುವ ಪ್ರಪ್ರಥಮ ಶಾಸನವಾಗಿದೆ, ಇದುವರೆಗೆ ಕ್ರಿ.ಶ. 1162 ರ ಕೊರ್ಸಿ-ಕಾಲ್ತೋಡು ಶಾಸನವನ್ನು ಆತನ ಪ್ರಥಮ ಶಾಸನವೆಂದು ಭಾವಿಸಲಾಗಿತ್ತು. ಆದರೆ, ಕುಲಶೇಖರದ ತುಳು ಶಾಸನ ಆತನ ಆಳ್ವಿಕೆಯ ಕ್ರಿ.ಶ. 1159 ರ ಕಾಲಕ್ಕೆ ಸಂಬಂಧಿಸಿರುವುದರಿಂದ, ಇದೇ ಆತನ ಪ್ರಥಮ ಶಾಸನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಶಾಸನದಲ್ಲಿ ಶುದ್ಧ ತುಳು ಪದಗಳಾದ ಧನುಪುಳೇ, ರತ್ನತೆಂದ್, ಸಕ್, ಪದರಾಡ್, ಪದಿರಾಡ್, ದಿಕ್ಕ್, ಲೋಕೊಂತಮಾಂತ ಮುಂತಾದ ಪದಗಳನ್ನು ಬಳಸಲಾಗಿದೆ. ಆದ್ದರಿಂದ ಈ ಶಾಸನವನ್ನು ತುಳು ಭಾಷೆಯ ಅತ್ಯಂತ ಪ್ರಾಚೀನ ಹಾಗೂ ಪ್ರಪ್ರಥಮ ಶಾಸನವೆಂದು ಪರಿಗಣಿಸಬಹುದಾಗಿದೆ.

ಈ ಶಾಸನ ಶೋಧ, ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎಂಬ ಹೋರಾಟಕ್ಕೆ ಪ್ರಬಲ ಆಧಾರವಾಗಿದೆ.

ಈ ತುಳು ಶಾಸನ ಅಧ್ಯಯನದಲ್ಲಿ ಹಾಗೂ ಅರ್ಥೈಸುವಲ್ಲಿ ನನಗೆ ನೆರವು ನೀಡಿದ ಶ್ರೀ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಸಂಸ್ಥೆಯ ತುಳು-ಸಂಸ್ಕೃತದ ಹಿರಿಯ ವಿದ್ವಾಂಸರಾದ ಶ್ರೀ ವಿಘ್ನರಾಜ್ ರವರಿಗೆ ನಾನು ಅಭಾರಿಯಾಗಿದ್ದೇನೆ.

ಈ ಶಾಸನಾಧ್ಯಯನಕ್ಕೆ ಅಧಿಕೃತವಾಗಿ ಆಹ್ವಾನಿಸಿದ ಮಂಗಳೂರಿನ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ, ದೇವಾಲಯದ ಆಡಳಿತ ಮಂಡಳಿಯವರಿಗೆ ಹಾಗೂ ಸ್ಥಳೀಯ ಯುವಕರಾದ ವಿಶ್ವಜಿತ್ ಹಾಗೂ ನನ್ನ ವಿದ್ಯಾರ್ಥಿಗಳಾದ ಪ್ರಜ್ಙಾ, ಕೀರ್ತಿ ಮತ್ತು ಶ್ರೇಯಸ್ ರವರಿಗೆ ನಾನು ಅಭಾರಿಯಾಗಿದ್ದೇನೆ.

ಪ್ರೊ. ಟಿ.ಮುರುಗೇಶಿ, ಇತಿಹಾಸ ಮತ್ತು ಪುರಾತತ್ವ ವಿಭಾಗ, ಎಂಎಸ್.ಆರ್.ಎಸ್. ಕಾಲೇಜು, ಶಿರ್ವ-೫೭೪೧೧೬. ಉಡುಪಿ.  Ph: 9482520933

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English