ರೈಲ್ವೆ ಹಳಿ ಮೇಲೆ ಕಲ್ಲು : ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ

11:40 PM, Monday, October 21st, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು ಸಂಬಂಧಪಟ್ಟ ಪೊಲೀಸರು ಹಾಗೂ ರೈಲ್ವೆ ಇಲಾಖೆ ರಕ್ಷಣಾ ಪಡೆ (RPF) ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆಯುತ್ತಿದೆ. ರೈಲ್ವೆ ಇಲಾಖೆಗೆ ಸೇರಿದ ನಮ್ಮ ರಾಷ್ಟ್ರೀಯ ಸಂಪತ್ತಿನ ಮೇಲೆ ಈ ರೀತಿ ದಾಳಿ ಮಾಡಿ ಅದನ್ನು ಹಾನಿಗೊಳಿಸುವುದಕ್ಕೆ ಪ್ರಯತ್ನಿಸಿರುವುದು ದೇಶದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರು ಕೂಡ ನಮ್ಮ ರಾಷ್ಟ್ರೀಯ ಸಂಪತ್ತುಗಳನ್ನು ನಮ್ಮ ಸೊತ್ತು ಎನ್ನುವ ರೀತಿಯಲ್ಲಿ ರಕ್ಷಿಸುವ ಕೆಲಸವನ್ನು ಮಾಡಬೇಕು. ಜತೆಗೆ, ಸಮಾಜದಲ್ಲಿ ಈ ರೀತಿಯ ಮಾನಸಿಕತೆ ಹೊಂದಿರುವ ವ್ಯಕ್ತಿಗಳು ಯಾರಿದ್ದಾರೆಯೋ ಅಂಥಹ ದೇಶದ್ರೋಹಿಗಳನ್ನು ಗುರುತಿಸುವ ಕೆಲಸವನ್ನು ಜನತೆ ಕೂಡ ಮಾಡಬೇಕೆಂದು ಕ್ಯಾ. ಚೌಟ ಅವರು ಮನವಿ ಮಾಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English