ಬೆಳ್ತಂಗಡಿ : ಕುವೆಟ್ಟು ಗ್ರಾಮದ ಗೇರುಕಟ್ಟೆ ಸಂಭೋಳ್ಯದ 15 ವರ್ಷದ ವಿದ್ಯಾರ್ಥಿ ಸುಮಂತ್ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ಬ್ರೈನ್ ಮ್ಯಾಪಿಂಗ್ ಹಾಗೂ ನಾರ್ಕೋ ವಿಶ್ಲೇಷಣೆ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗಿದೆ. ನ್ಯಾಯಾಲಯದಿಂದ ಮುಂಚಿತವಾಗಿ ಅನುಮತಿ ಪಡೆದು ಈ ವೈಜ್ಞಾನಿಕ ಪರೀಕ್ಷೆಗಳನ್ನು ಕೈಗೊಳ್ಳಲಾಗುತ್ತಿದೆ.
ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ ಸಾಗಿರುವ ಈ ಪ್ರಕರಣದ ತನಿಖೆಗಾಗಿ ಸುಮಂತ್ ಕುಟುಂಬದ ಐವರು ಸದಸ್ಯರನ್ನು ಪ್ರಥಮ ಹಂತದಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಆಗಸ್ಟ್ 10ರಂದು ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್ ಮತ್ತು ತಾಯಿ ರತ್ನಾವತಿ ಅವರನ್ನು ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಸುದೀರ್ಘ ವಿಚಾರಣೆಗೆ ಒಳಪಡಿಸಲಾಯಿತು. ಅದೇ ದಿನ ಮಧ್ಯಾಹ್ನದ ನಂತರ ಸಹೋದರ ಸುದರ್ಶನ್ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು.
ಮರುದಿನ ಅಂದರೆ ಆಗಸ್ಟ್ 11ರಂದು ರತ್ನಾವತಿ ಅವರ ಸಹೋದರ ರಾಧಾಕೃಷ್ಣ ಹಾಗೂ ಸಂಬಂಧಿ ಲಕ್ಷ್ಮೀನಾರಾಯಣ ಅವರನ್ನು ವಿಚಾರಣೆ ನಡೆಸಿ ಮಾಹಿತಿ ಕಲೆಹಾಕಲಾಗಿದೆ. ಈ ಐವರು ನೀಡಿದ ಹೇಳಿಕೆಗಳನ್ನು ತನಿಖಾ ತಂಡವು ಇದುವರೆಗೆ ಸಂಗ್ರಹಿಸಿರುವ ಸಾಕ್ಷ್ಯಾಧಾರಗಳೊಂದಿಗೆ ಎಫ್ಎಸ್ಎಲ್ ತಜ್ಞರು ಸದ್ಯ ಹೋಲಿಸಿ ವಿಶ್ಲೇಷಿಸುತ್ತಿದ್ದಾರೆ. ಬ್ರೈನ್ ಮ್ಯಾಪಿಂಗ್ನ ಮುಂದಿನ ಹಂತಗಳಿಗೆ ಹಾಜರಾಗುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದ್ದು, ಪ್ರಕರಣದಲ್ಲಿ ಅನುಮಾನ ವ್ಯಕ್ತವಾಗಿರುವ ಇತರ ಶಂಕಿತರನ್ನೂ ಈ ವೈಜ್ಞಾನಿಕ ಪರೀಕ್ಷೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಸುಮಂತ್, 2026ರ ಜನವರಿ 14ರಂದು ಮುಂಜಾನೆ ಧನುಪೂಜೆಗಾಗಿ ಸಮೀಪದ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದು ಸಹಜ ಸಾವಲ್ಲ, ಬದಲಿಗೆ ಯೋಜಿತ ಕೊಲೆ ಎಂಬ ಶಂಕೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು. ಪೊಲೀಸರು ವಿಶೇಷ ತಂಡ ರಚಿಸಿ ಬಹುಆಯಾಮಗಳಲ್ಲಿ ತನಿಖೆ ನಡೆಸಿದ್ದರೂ ಸಾವಿನ ಹಿಂದಿನ ನೈಜ ಕಾರಣ ಹಾಗೂ ನಿಗೂಢತೆ ಇನ್ನು ಸಂಪೂರ್ಣವಾಗಿ ಹೊರಬರಬೇಕಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









