ಧರ್ಮಸ್ಥಳ: ಧರ್ಮಸ್ಥಳದ ಮೂಡಂಗಲ್ ಫ್ರೆಂಡ್ಸ್ ಸಂಸ್ಥೆಯ ನೇತೃತ್ವದಲ್ಲಿ ಇಂದಿನ ಯುವ ಪೀಳಿಗೆಗೆ ಗ್ರಾಮೀಣ ಸಂಸ್ಕೃತಿ, ಬದುಕಿನ ಸೊಗಡು ಹಾಗೂ ಸಾಂಪ್ರದಾಯಿಕ ಆಟಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಧರ್ಮಸ್ಥಳದಲ್ಲಿ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಾಶಯ ಕೋರಿದರು. ಈ ವೇಳೆ ಮಾತನಾಡಿದ ಅವರು, ಮಣ್ಣಿನೊಂದಿಗಿನ ಮಾನವನ ಸೌಹಾರ್ದಯುತ ಸಂಬಂಧವನ್ನು ಗಟ್ಟಿಗೊಳಿಸಲು ಮತ್ತು ನಮ್ಮ ಪರಂಪರಾಗತ ಕೃಷಿ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸಲು ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ ಎಂದರು.
ಕೆಸರುಗದ್ದೆಯಲ್ಲಿ ಏರ್ಪಡಿಸಲಾಗಿದ್ದ ಸಾಂಪ್ರದಾಯಿಕ ಕ್ರೀಡಾಕೂಟದಲ್ಲಿ ಮಕ್ಕಳು, ಮಹಿಳೆಯರು ಹಾಗೂ ಹಿರಿಯರು ತಾರತಮ್ಯವಿಲ್ಲದೆ ಉತ್ಸಾಹದಿಂದ ಧುಮುಕಿದರು. ಸ್ಪರ್ಧಿಗಳು ಕೆಸರಿನಲ್ಲಿ ಪ್ರದರ್ಶಿಸಿದ ಚುರುಕುತನ ಹಾಗೂ ಕ್ರೀಡಾ ಮನೋಭಾವವು ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡಿತು.
ಹಳೆಯ ಕಾಲದ ಜನಪದ ಬದುಕನ್ನು ನೆನಪಿಸುವುದರ ಜೊತೆಗೆ ಸಮಾಜದಲ್ಲಿ ಪರಸ್ಪರ ಬಾಂಧವ್ಯ ಮತ್ತು ಸಾಮರಸ್ಯವನ್ನು ವೃದ್ಧಿಸಲು ಈ ಕ್ರೀಡಾಕೂಟವು ಉತ್ತಮ ವೇದಿಕೆಯಾಯಿತು. ಸ್ಥಳೀಯ ನಿವಾಸಿಗಳು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.
ಸಮಾರಂಭದಲ್ಲಿ ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರ್ ಪಿ. ಲಕ್ಷ್ಮೀನಾರಾಯಣ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ವಕೀಲ ಕೇಶವ ಬೆಳಾಲ್, ಪ್ರಭಾಕರ ಪೂಜಾರಿ, ಉದಯ್ ಕುಮಾರ್, ಮಾಜಿ ಗ್ರಾ.ಪಂ. ಸದಸ್ಯರಾದ ಮುರಳೀಧರ ದಾಸ್, ಹರ್ಷತ್ ಜೈನ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









