ಸದ್ಯಕ್ಕೆ ಅಂಬರೀಷ್ ಸಿಂಗಾಪುರಕ್ಕೆ ಸ್ಥಳಾಂತರ ಇಲ್ಲ: ಡಾ.ಗುಲೇರಿಯಾ

3:43 PM, Friday, February 28th, 2014
Share
1 Star2 Stars3 Stars4 Stars5 Stars
(4 rating, 6 votes)
Loading...

Ambarishಬೆಂಗಳೂರು: ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಹಿರಿಯ ನಟ, ವಸತಿ ಸಚಿವ ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯುವ ನಿರ್ಧಾರವನ್ನು ಸದ್ಯಕ್ಕೆ ಕೈ ಬಿಡಲಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ರಣದೀಪ್ ಗುಲೇರಿಯಾ ಅವರು ಶುಕ್ರವಾರ ಹೇಳಿದ್ದಾರೆ.

ಅಂಬರೀಷ್ ಚಿಕಿತ್ಸೆ ಪಡೆಯುತ್ತಿರುವ ವಿಕ್ರಂ ಆಸ್ಪತ್ರೆಗೆ ಭೇಟಿ, ಅಂಬಿ ಆರೋಗ್ಯ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗುಲೇರಿಯಾ, ಸಚಿವ ಅಂಬರೀಷ್ ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ಇನ್ನು ಕೆಲವು ವರದಿಗಳು ಬರಬೇಕಿದೆ. ಹೀಗಾಗಿ ಅವರನ್ನು ಸದ್ಯಕ್ಕೆ ಸಿಂಗಾಪುರಕ್ಕೆ ಸ್ಥಳಾಂತರಿಸುವುದಿಲ್ಲ ಎಂದು ಹೇಳಿದ್ದಾರೆ.

ಅಂಬರೀಷ್ ಅವರ ಮೂತ್ರಪಿಂಡದ ಕಾರ್ಯನಿರ್ವಹಣೆ ಉತ್ತಮವಾಗಿದೆ. ಶ್ವಾಸಕೋಶದ ಸೋಂಕು ಇನ್ನು ನಿವಾರಣೆಯಾಗಬೇಕಿದ್ದು, ಅಂಬಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಗುಲೇರಿಯಾ ತಿಳಿಸಿದರು.

ಇದೇ ವೇಳೆ ಮಾತನಾಡಿದ ವಿಕ್ರಂ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಸತೀಶ್ ಅವರು, ಅಂಬರೀಷ್ ಅವರ ಶ್ವಾಸಕೋಶ ದುರ್ಬಲವಾಗಿರುವುದರಿಂದ ವೆಂಟಿಲೇಟರ್‌ನಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆಸಲಾಗುವುದು ಎಂದು ತಿಳಿಸಿದರು.

ಕಳೆದ ಒಂದು ವಾರದಿಂದ ಅಂಬರೀಷ್ ಅವರು ನಗರದ ವಿಕ್ರವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂರು ದಿನಗಳ ಹಿಂದೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಂಬಿ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಆಗಮಿಸಿದ್ದರು. ಈ ವೇಳೆ ವೈದ್ಯರು ಹಾಗೂ ಅಂಬರೀಷ್ ಅವರ ಪತ್ನಿ ಸುಮಲತಾ ಅವರೊಂದಿಗೆ ಮಾತುಕತೆ ನಡೆಸಿದ ರಜನಿ, ಹೆಚ್ಚಿನ ಚಿಕಿತ್ಸೆಗಾಗಿ ಅಂಬರೀಷ್ ಅವರನ್ನು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಅಂಬರೀಷ್ ಅವರನ್ನು ವಿದೇಶಕ್ಕೆ ಕರೆದೊಯ್ಯುವ ವ್ಯವಸ್ಥೆ ಮಾಡುವಂತೆ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಅಂಬಿ ಕುಟುಂಬ ಮನವಿ ಮಾಡಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English