ಬೆಲೆ ವಿಮೆ ವ್ಯಾಪ್ತಿಗೆ ಅಡಿಕೆ: ಪ್ರಸ್ತಾವನೆಗೆ ಡಿಸಿ ಸೂಚನೆ

11:32 PM, Friday, May 30th, 2014
Share
1 Star2 Stars3 Stars4 Stars5 Stars
(No Ratings Yet)
Loading...

DC Mangalore

ಮಂಗಳೂರು : ಅಡಿಕೆ ಬೆಲೆಯನ್ನು ತೋಟಗಾರಿಕೆ ಇಲಾಖೆಯ ಮೂಲಕ ಬೆಳೆ ವಿಮೆ ವ್ಯಾಪ್ತಿಗೆ ತರುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ರಾಷ್ಟ್ರೀಯ ಕೃಷಿ ವಿಮಾ ಯೋಜನೆ ಮುಂಗಾರು 2014ರ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡುತ್ತಿದ್ದರು. ಅಡಿಕೆ ಅಲ್ಲದೆ, ಕಾಳುಮೆಣಸು, ಕೋಕಾ, ಅನಾನಸು, ಗೇರು ಕೃಷಿಯನ್ನು ಬೆಳೆ ವಿಮಾ ವ್ಯಾಪ್ತಿಗೆ ತರಲು ಪ್ರಸ್ತಾವನೆ ಸಿದ್ಧಪಡಿಸುವಂತೆ ಅವರು ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಳೆ ಕೃಷಿಯನ್ನು ವಿಮೆ ವ್ಯಾಪ್ತಿಗೆ ತರಲಾಗಿದೆ. ಅಲ್ಲದೆ, ಮಳೆ ಆಶ್ರಿತವಾಗಿ ಬೆಳೆಯುವ ಭತ್ತವನ್ನು ವಿಮೆಗೆ ಒಳಪಡಿಸಲಾಗಿದೆ. ರೈತರು ನಿಗದಿತ ಪ್ರೀಮಿಯಂನ್ನು ಪಾವತಿಸಿ, ವಿಮೆಯ ಸೌಲಭ್ಯ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಭತ್ತ ಬೆಳೆಯುವ ಪ್ರಮಾಣ ಕಡಿಮೆಯಾಗುತ್ತಿರುವುದು ಆತಂಕಕಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆಯುವ ಪ್ರದೇಶಗಳ ನಿಖರ ಮಾಹಿತಿ ಸಂಗ್ರಹಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಎ.ಬಿ. ಇಬ್ರಾಹಿಂ, ಗ್ರಾಮೀಣ ಪ್ರದೇಶಗಳಲ್ಲಿ ಭತ್ತದ ಬೆಳೆ ಪ್ರೋತ್ಸಾಹಿಸಲು ಕೃಷಿಕರಿಗೆ ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಅವರಿಗೆ ತ್ವರಿತವಾಗಿ ತಲುಪಲು ಹೆಚ್ಚು ಒತ್ತು ನೀಡುವಂತೆ ತಿಳಿಸಿದರು.

ಜಿಲ್ಲೆಯು ಹಲಸಿನ ಹಣ್ಣಿಗೆ ಹೆಚ್ಚು ಪ್ರಖ್ಯಾತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಹಲಸಿನ ಹಣ್ಣಿನ ವಿವಿಧ ಉತ್ಪನ್ನಗಳಿಗೆ ದೇಶ-ವಿದೇಶಗಳಲ್ಲಿ ಮಾರುಕಟ್ಟೆ ಸೃಷ್ಟಿಸುವ ಸಂಬಂಧ ಅಧ್ಯಯನ ನಡೆಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಎಚ್.ಕೆಂಪೇಗೌಡ, ತೋಟಗಾರಿಕಾ ಇಲಾಖಾ ಉಪನಿರ್ದೇಶಕ ಯೋಗೇಶ್, ಪಶುಸಂಗೋಪನಾ ಉಪನಿರ್ದೇಶಕ ಡಾ.ಹಲಗಪ್ಪ, ಮೀನುಗಾರಿಕಾ ಉಪನಿದೇಶಕ ಪಿ. ಪಾಶ್ರ್ವನಾಥ್ ಮತ್ತಿತರರು ಇದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English