ಶರಿಯತ್ ಕಾನೂನಿಗೆ ಅನ್ಯಾಯವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಮಸೂದ್ ಎಚ್ಚರಿಕೆ

3:45 PM, Friday, October 28th, 2016
Share
1 Star2 Stars3 Stars4 Stars5 Stars
(4 rating, 1 votes)
Loading...

musilm-organisationsಮಂಗಳೂರು: ಇಸ್ಲಾಂ ಧರ್ಮದ ಶರಿಯತ್ ಕಾನೂನಿನ ಬಗ್ಗೆ ಹಸ್ತಕ್ಷೇಪ ಮಾಡಿ ತ್ರಿವಳಿ ತಲಾಕ್‍ನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಅಫಿಡವಿಟ್‌ ಸಲ್ಲಿಸಿರುವುದು ಸರಿಯಲ್ಲ ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್. ಮೊಹಮ್ಮದ್ ಮಸೂದ್ ಆಕ್ಷೇಪ ವ್ಯಕ್ತಪಡಿಸಿದರು.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶರಿಯತ್ ಕಾನೂನಿಗೆ ಅನ್ಯಾಯವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ ಅವರು, ಸರ್ಕಾರ ಇದಕ್ಕೆಲ್ಲ ಅವಕಾಶ ಮಾಡಿಕೊಡಬಾರದು ಎಂದರು.

ನಮ್ಮ ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯಕ್ಕೆ ಮನ್ನಣೆ ನೀಡಿದೆ. ತಲಾಖ್‍ನಲ್ಲಿ ತಪ್ಪುಗಳಿದ್ದಲ್ಲಿ ಅದನ್ನು ಸರಿಪಡಿಸಲು ಧರ್ಮ ಗುರುಗಳಿದ್ದಾರೆ. ಶರಿಯತ್‌ ಕಾನೂನಿನಿಂದ ಅನ್ಯಾಯವಾಗಿದೆ ಎಂದು ನಮ್ಮ ಬಳಿ ಬಂದ್ರೆ ನಾವು ನ್ಯಾಯಬದ್ಧವಾಗಿ ಬಗೆಹರಿಸಲು ಸಿದ್ಧರಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಸಂವಿಧಾನದಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಆಕ್ಷೇಪವಿಲ್ಲ. ಆದರೆ ಶರಿಯತ್‌ ಕಾನೂನಿನ ಬಗ್ಗೆ ಹಸ್ತಕ್ಷೇಪ ಅಗತ್ಯವಿಲ್ಲ. ಇದರಲ್ಲಿ ನ್ಯಾಯಾಲಯ ಅಥವಾ ಸರ್ಕಾರ ಹಸ್ತಕ್ಷೇಪ ಮಾಡಲು ಮುಸ್ಲಿಂ ಸಮುದಾಯ ಬಿಡುವುದಿಲ್ಲ. ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ದೇಶಾದ್ಯಂತ ಎಲ್ಲಾ ಮುಸ್ಲಿಂ ಸಂಘಟನೆಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸುವಂತೆ ಕರೆ ನೀಡಿದೆ. ಇದಕ್ಕೆ ಪೂರಕವಾಗಿ ಮುಸ್ಲಿಂ ಪುರುಷರು ಮತ್ತು ಮಹಿಳೆಯರ ಸಹಿ ಸಂಗ್ರಹ ಮಾಡಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಈ ಬಗ್ಗೆ ಎಲ್ಲಾ ರಾಜ್ಯಗಳ ಇಸ್ಲಾಂ ವಿಧ್ವಾಂಸರು ಹಾಗೂ ಮುಖಂಡರನ್ನು ಸಂಪರ್ಕಿಸಿ ವಿರೋಧಿಸುವಂತೆ ಕರೆ ನೀಡಿದೆ. ಇದಕ್ಕೆ ಪೂರಕವಾಗಿ ದ.ಕ. ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷತೆಯಲ್ಲಿ ಉಭಯ ಜಿಲ್ಲೆಗಳ ಎಲ್ಲಾ ಮುಸ್ಲಿಂ ಸಂಘಟನೆಗಳ ಸಭೆ ಇತ್ತೀಚೆಗೆ ನಡೆದು ಚರ್ಚಿಸಿ ಉಭಯ ಜಿಲ್ಲೆಗಳಲ್ಲಿ ಸಹಿ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English