[1]ಮಂಗಳೂರು: ಎತ್ತಿನಹೊಳೆ ಯೋಜನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆ ನಡೆಸಿದ ಮಾತುಕತೆ ಯಾವುದೇ ರೀತಿ ಫಲಪ್ರದವಾಗಿಲ್ಲ. ಈ ನಿಟ್ಟಿನಲ್ಲಿ ಜನವರಿ 26ರಿಂದ ತೀವ್ರ ಹೋರಾಟ ನಡೆಸುವುದಾಗಿ ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿ ಬಿಗಡಾಯಿಸಲು ರಾಜಕಾರಣಿಗಳು ಹಾಗೂ ಅಧಿಕಾರಿಗಳೇ ಕಾರಣ. ಜಿಲ್ಲಾ ಉಸ್ತುವಾರಿ ಸಚಿವರು ಮನಸ್ಸು ಮಾಡಿದರೆ ಒಂದು ದಿನದಲ್ಲಿ ಸಮಸ್ಯೆ ಬಗೆಹರಿಸಬಹುದು. ಆದರೆ, ಅವರು ಮುತುವರ್ಜಿ ವಹಿಸುತ್ತಿಲ್ಲ ಎಂದು ದೂರಿದರು.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಕಳೆದ ನವೆಂಬರ್ 2 ರಂದು ನೀಡಿದ ಆದೇಶದ ಪ್ರಕಾರ ಜನವರಿ 14ರೊಳಗೆ ಸರ್ವೆ ವರದಿ ನೀಡಬೇಕಿತ್ತು. ಆದರೆ, ಇಲ್ಲಿಯವರೆಗೆ ನೀಡಿಲ್ಲ. ಇನ್ನು ಯೋಜನೆ ಕೈಗೆತ್ತಿಕೊಳ್ಳುವ ಜಾಗವನ್ನು ಬಿಟ್ಟು ಬೇರೆ ಕಡೆ ಸರ್ವೆ ನಡೆಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗ್ರಾಮ ಪಂಚಾಯತ್ ಸದಸ್ಯರಿಂದ ಹಿಡಿದು ಸಂಸದರವರೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ಎಚ್ಚರಿಸಿದರು.