ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕಾಪಿಕಾಡ್ ರಸ್ತೆಯ ಸುರಭಿ ಹೊಟೇಲ್ ಮುಂಭಾಗದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಇಬ್ಬರನ್ನು ಬಂಧಿಸಿದ್ದಾರೆ.
ಅವರು ಕೇರಳದಿಂದ ಮಂಗಳೂರು ನಗರಕ್ಕೆ ಗಾಂಜಾ ಖರೀದಿಸಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ.
ಅಬ್ದುಲ್ ಅಂಸಾದ್ ಸಿ ಎಚ್, ಉದಯ ಕುಮಾರ್ ರೈ ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 5 ಕೆಜಿ ಗಾಂಜಾ, 3 ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು 1,66,000 ರು. ಮೌಲ್ಯದ ಸರಕನ್ನು ವಶಪಡಿಸಿಕೊಂಡಿದ್ದಾರೆ. ಈ ಗಾಂಜಾವನ್ನು ಆರೋಪಿಗಳು ಕೇರಳ ಇಡುಕ್ಕಿ ಜಿಲ್ಲೆಯಿಂದ ಖರೀದಿ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ತಂದಿದ್ದರು.
ಆರೋಪಿಗಳ ಪೈಕಿ ಉದಯ ಕುಮಾರ್ ರೈ ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಮಂಗಳೂರು ಪೂರ್ವ, ಬರ್ಕೆ, ಬಜಪೆ ಪೊಲೀಸ್ ಠಾಣೆಗಳಲ್ಲಿ ಹಾಗೂ ಕಾಸರಗೋಡು ಪೊಲೀಸ್ ಠಾಣೆಗಳಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ. ಸಿಸಿವಿ ಪೊಲೀಸರು ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಗಾಂಜಾವನ್ನು ಮುಂದಿನ ಕ್ರಮಕ್ಕಾಗಿ ಉರ್ವಾ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.