ಮಂಗಳೂರು : ಉತ್ತರಪ್ರದೇಶದಲ್ಲಿ ಅಲ್ಪಸಂಖ್ಯಾತರು ಬಿಜೆಪಿಯತ್ತ ಒಲವು ತೋರಿಸಿರುವುದು ಚುನಾವಣಾ ಫಲಿತಾಂಶದಿಂದ ಖಚಿತವಾಗಿದ್ದು, ಮುಂದೆ ಕರ್ನಾಟಕದಲ್ಲೂ ಇದು ಪುನರಾವರ್ತನೆಯಾಗುತ್ತದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಪ್ರದಾನ ಕಾರ್ಯದರ್ಶಿ ರಶ್ಮಿ ಡಿ’ಸೋಜಾ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರದಂದು ನಡೆದ ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಾದ ಜೋಯ್ಲಸ್ ಡಿ’ಸೋಜಾ ಅವರ ಅಧ್ಯಕ್ಷತೆ ವಹಿಸಿ ಮಂಡಲ ಮಟ್ಟದಲ್ಲಿ ಅಲ್ಪಸಂಖ್ಯಾತ ಮೋರ್ಚಾವು ವಿವಿಧ ಕಾರ್ಯಯೋಜನೆಗಳ ಮೂಲಕ ಅಲ್ಪಸಂಖ್ಯಾತ ಬಾಂಧವರನ್ನು ಬಿಜೆಪಿಯತ್ತ ಸೆಳೆಯಲು ಯಶಸ್ವಿಯಾಗಿದೆ. ಮುಂಬರುವ ಚುನಾವಣೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಭಾರೀ ಪ್ರಮಾಣದಲ್ಲಿ ಬಿಜೆಪಿಯನ್ನು ಬೆಂಬಲಿಸುವುದು ಶತಃಸಿದ್ಧ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮಾತನಾಡಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತುಕೊಡುವಂತೆ ಕರೆನೀಡಿದರು. ಈ ಸಂದರ್ಭದಲ್ಲಿ ಇತ್ತೀಚೆಗೆ ಎಪಿಎಂಸಿ ಚುನಾವಣೆಯಲ್ಲಿ ಜಯಗಳಿಸಿದ ಬೆಳ್ತಂಗಡಿಯ ಸೆಲೆಸ್ತಿನ್ ಡಿ’ಸೋಜಾ ಅವರನ್ನು ಸನ್ಮಾನಿಸಲಾಯಿತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕ್ಯಾ| ಬ್ರಿಜೇಶ್ ಚೌಟ, ಸುದರ್ಶನ ಎಂ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಭಾರಿಯಾಗಿರುವ ಸತೀಶ್ ಕುಂಪಲ, ರಾಜ್ಯ ಅಲ್ಪ ಸಂಖ್ಯಾತ ಮೋರ್ಚಾದ ರಹೀಂ ಉಚ್ಚಿಲ್, ಜಮಾಲುದ್ದೀನ್ ಉಪಸ್ಥಿತರಿದ್ದರು.
ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮುನೀರ್ ಬಾವಾ ಸ್ವಾಗತಿಸಿದರು. ಸಾಬು ಜೇಕಬ್ ಕಾರ್ಯಕ್ರಮ ನಿರೂಪಿಸಿದರು. ಮಹಮ್ಮದ್ ವಳವೂರು ವಂದಿಸಿದರು.