[1]ಮಂಗಳೂರು : ಎ. ಸದಾನಂದ ಶೆಟ್ಟಿಯವರ 75ನೆ ಜನ್ಮ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 2ರಂದು ‘ಸದಾಭಿನಂದನೆ’ ಕಾರ್ಯಕ್ರಮವನ್ನು ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಅಮರನಾಥ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ, ಶ್ರೀದೇವಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಕರಾವಳಿಯ ಕ್ರೀಡೆ, ಶಿಕ್ಷಣ, ಸಾಂಸ್ಕೃತಿಕ, ಸಾಮಾಜಿಕ, ಉದ್ಯಮ ಹಾಗೂ ಸೇವಾ ವಲಯದಲ್ಲಿ ಕೊಡುಗೈದಾನಿಯಾಗಿ ಅಪ್ರತಿಮ ಮಾತೃಸಂಘದ ಮಾಜಿ ಅಧ್ಯಕ್ಷ, ಸ್ಪೋರ್ಟ್ಸ್ ಪ್ರಮೋಟರ್ಸ್ ಕ್ಲಬ್, ದ.ಕ. ಬ್ಯಾಡ್ಮಿಂಟನ್ ಅಸೋಸಿಯೇಶನ್, ದ.ಕ. ಅಮೆಚೂರು ಕಬಡ್ಡಿ ಅಸೋಸಿಯೇಶನ್, ಅಮೆಚೂರು ಲಗೋರಿ ಅಸೋಸಿಯೇಶನ್ ಮೊದಲಾದ ಸಂಸ್ಥೆಗಳ ಗೌರವಾಧ್ಯಕ್ಷರಾಗಿರುವ ಎ. ಸದಾನಂದ ಶೆಟ್ಟಿಯವರನ್ನು ಸಮಾನ ಮನಸ್ಕ ಅಭಿಮಾನಿ ಮಿತ್ರಸು ಸೇರಿ ಅಭಿನಂದಿಸಲಿದ್ದಾರೆ ಎಂದು ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.
[2]ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಅವರು ಹೇಳಿದರು.
ವಿದ್ಯಾಗಿರಿಯ ಆವರಣದಲ್ಲಿ 75 ವಿವಿಧ ಜಾತಿಯ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದ ಡಾ. ಮೋಹನ್ ಆಳ್ವ, ಸದಾನಂದ ಶೆಟ್ಟಿಯವರು ಕ್ರೀಡೆಗೆ ಹೆಚ್ಚಿನ ಒತ್ತು ನೀಡಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಕ್ರೀಡಾ ಕಾರ್ಯಕ್ರಮವನ್ನು ನಡೆಸುವ ಬಗ್ಗೆಯೂ ಸಮಿತಿ ಚಿಂತನೆ ನಡೆಸಲಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳು ನಡೆದಿದ್ದು, ಪ್ರಾದೇಶಿಕ ಉಪ ಸಮಿತಿಗಳನ್ನು ರಚಿಸುವ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಅವರು ಹೇಳಿದರು.
ಗೋಷ್ಠಿಯಲ್ಲಿ ಕದ್ರಿ ನವನೀತ ಶೆಟ್ಟಿ, ಕೃಷ್ಣ ಶೆಟ್ಟಿ ತಾರೆಮಾರು, ಲೀಲಾಕ್ಷ ಕರ್ಕೇರಾ ಮೊದಲಾದವರು ಉಪಸ್ಥಿತರಿದ್ದರು.