[1]ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ, ಸಿಲಿಂಡರ್, ಒಲೆ ವಿತರಿಸುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ಡಿಸೆಂಬರ್ನಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್ ಅವರು, ಅಡುಗೆ ಅನಿಲ ಸಂಪರ್ಕ ಹೊಂದದೆ ಇರುವ ಬಿಪಿಎಲ್ ಕುಟುಂಬದವರು ಇದೇ ತಿಂಗಳಿನಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸಬಹುದು. ಆಹಾರ ಇಲಾಖೆ ಹಾಗೂ ಸಂಬಂಧಿಸಿದ ಅನಿಲ ವಿತರಕರು ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ. ಬಳಿಕ, ಅರ್ಹ ಫಲಾನುಭವಿಗಳಿಗೆ 14.2 ಕೆ.ಜಿ ಅನಿಲ ಸಿಲಿಂಡರ್, ಒಲೆ, ರೆಗ್ಯುಲೇಟರ್ಗಳನ್ನು ವಿತರಿಸಲಾಗುವುದು. ಅಲ್ಲದೆ ಉಚಿತವಾಗಿ ಎರಡು ಬಾರಿ ಸಿಲಿಂಡರ್ ಭರ್ತಿ ಮಾಡಿಕೊಡಲಾಗುವುದು ಎಂದು ತಿಳಿಸಿದರು.
‘ಮುಖ್ಯಮಂತ್ರಿ ಅನಿಲ ಭಾಗ್ಯ’ಯೋಜನೆ ಜಾರಿಗೆ ತರುವುದಕ್ಕಾಗಿ ಹೆಚ್ಚುವರಿಯಾಗಿ 1 ಲಕ್ಷ ಸಿಲಿಂಡರ್ ಗಳನ್ನು ನೀಡುವಂತೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಕೇಳಿಕೊಂಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ಇದೇ ವೇಳೆ, ಕೇಂದ್ರ ಸರ್ಕಾರದ ‘ಉಜ್ವಲ ಯೋಜನೆ’ಯಲ್ಲಿ ಸಿಲಿಂಡರ್ ಮತ್ತು ಅನಿಲ ಸಂಪರ್ಕ ಪಡೆದವರಿಗೆ ಉಚಿತವಾಗಿ ಒಲೆ ವಿತರಿಸಲು ನಿರ್ಧರಿಸಲಾಗಿತ್ತು. ಆದರೆ, ಉಜ್ವಲ ಯೋಜನೆಯ ಸೌಲಭ್ಯ ರಾಜ್ಯದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕವಾಗಿಯೇ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.