ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಪುತ್ತೂರು ತಾಲೂಕು ಕಲ್ಲಗುಡ್ಡೆಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನವನ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ನಗರದ ನೆಹರೂ ಮೈದಾನದಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ರಾಷ್ಟ್ರ ಧ್ವಜಾರೋಹಣ ನೇರವೇರಿಸಿ ಸಂದೇಶ ನೀಡಿದರು. ಈಗಾಗಲೇ 35 ಲಕ್ಷ ರೂ. ವೆಚ್ಚದಲ್ಲಿ ಬಂಟ್ವಾಳದಲ್ಲಿ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನವನ್ನು ನಿರ್ಮಿಸಿ ಲೋಕಾರ್ಪಣೆ ಮಾಡಲಾಗಿದೆ. ಪುತ್ತೂರಿನ ಕಲ್ಲಗುಡ್ಡೆಯಲ್ಲಿ ಕೆಎಫ್ ಡಿಎಫ್ ಯೋಜನೆಯಡಿ ಸಸ್ಯೋದ್ಯಾನ ವನ ನಿರ್ಮಿಸಲಾಗುತ್ತಿದೆ ಎಂದವರು ವಿವರಿಸಿದರು.
ರಾಜ್ಯ ಸರಕಾರವು ದ.ಕ. ಜಿಲ್ಲೆ ಯಲ್ಲಿ ಕಾರ್ಯಗತಗೊಳಿಸಿದ ಹಾಗೂ ಹಮ್ಮಿಕೊಂಡಿರುವ ವಿವಿಧ ಯೋಜನೆಗಳನ್ನು ವಿವರಿಸಿದ ಸಚಿವರು ನಾಡು- ನುಡಿಯ ಅಭಿವೃದ್ಧಿಯಾಗಬೇಕಾದರೆ ಈ ನೆಲದ ಜನರ ಅಭಿವೃದ್ಧಿಯಾಗಬೇಕು; ಅವರ ಬದುಕು ಶ್ರೀಮಂತವಾಗಬೇಕು. ಭಾಷೆ, ಸಂಸ್ಕೃತಿ, ಪರಂಪರೆಗಳು ನಿರಂತರವಾಗಿ ಉಳಿಯಬೇಕಾದರೆ ಇಲ್ಲಿನ ಬದುಕು ಹಸನಾಗಬೇಕು. ಈ ದಿಶೆಯಲ್ಲಿ ಸರಕಾರವು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ, ಸಂಸದ ನಳಿನ್ ಕುಮಾರ್ ಕಟೀಲು, ಮೇಯರ್ ಕವಿತಾ ಸನಿಲ್, ಮುಡಾ ಅಧ್ಯಕ್ಷ ಕೆ. ಸುರೇಶ್ ಬಲ್ಲಾಳ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ಉಪ ಮೇಯರ್ ರಜನೀಶ್, ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ತಾ.ಪಂ. ಅಧ್ಯಕ್ಷ ಮಹಮದ್ ಮೋನು, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English