[1]ಮಂಗಳೂರು: ಇಲ್ಲಿನ ಕುಂಟಿಕಾನ ಶಾಲೆಯ ಬಳಿಯೇ ಬಾರ್ ಆ್ಯಂಡ್ ರೆಸ್ಟೊರೆಂಟ್ ತೆರೆದಿರುವುದರ ವಿರುದ್ಧ ವಿದ್ಯಾರ್ಥಿಗಳು ಹಾಗೂ ಶಾಲಾ ಆಡಳಿತ ಮಂಡಳಿ ನಡೆಸಿದ ಹೋರಾಟಕ್ಕೆ ಜಿಲ್ಲಾಧಿಕಾರಿ ಶಶಿಕಾಂತ್ ಸ್ಪಂದಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಯಾವುದೇ ತಂಬಾಕು ಅಥವಾ ಅಮಲು ಪದಾರ್ಥಗಳ ಮಾರಾಟ, ಜಾಹೀರಾತು ಹಾಕುವುದನ್ನು ನಿಷೇಧಿಸಲಾಗಿದೆ. ಆದರೆ ಇಷ್ಟಾದರೂ ಶಾಲೆಗೆ ಕೇವಲ 80 ಮೀಟರ್ ವ್ಯಾಪ್ತಿಯಲ್ಲಿ ಬಾರ್ ಆ್ಯಂಡ್ ರೆಸ್ಟೊರೆಂಟ್ಗೆ ಅನುಮತಿ ನೀಡಲಾಗಿತ್ತು. ಇದನ್ನು ವಿರೋಧಿಸಿ ಸೈಂಟ್ ಆ್ಯನ್ಸ್ ಶಾಲೆಯ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ, ಸೂಕ್ತ ಕ್ರಮಕೈಗೊಳ್ಳುವಂತೆ ಅಬಕಾರಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಇದು ನಮ್ಮ ಹೋರಾಟಕ್ಕೆ ಸಂದ ಮೊದಲ ಜಯ ಎಂದು ಹರ್ಷ ವ್ಯಕ್ತಪಡಿಸಿರುವ ಶಾಲಾಡಳಿತ ಹಾಗೂ ಪೋಷಕರು, ವಿದ್ಯಾರ್ಥಿಗಳು, ಮುಂದೆ ಸಂಪೂರ್ಣ ನ್ಯಾಯ ದೊರೆಯುವ ನಿರೀಕ್ಷೆಯಿದೆ ಎಂದಿದ್ದಾರೆ.
ಈ ಮಧ್ಯೆ ವಿದ್ಯಾರ್ಥಿಗಳು ಬಾರ್ನ್ನು ಹೊರತುಪಡಿಸಿ ಕೇವಲ ರೆಸ್ಟೋರೆಂಟ್ಗೆ ಮಾತ್ರವೇ ಅವಕಾಶ ಕೊಡಿ ಎಂದು ಪತ್ರ ಚಳವಳಿ ಮೂಲಕ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಅಧ್ಯಕ್ಷರಿಗೆ ಮನವಿ ಮಾಡಿದ್ದರು.