[1]ಮಂಗಳೂರು: ಕೊಲೆ ಯತ್ನ ಮತ್ತು ಗಾಂಜಾ ಮಾರಾಟ ಪ್ರಕರಣಗಳಲ್ಲಿ ಶಾಮೀಲಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಕೋಟೆಕಾರ್ ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ಮಂಗಳೂರು ದಕ್ಷಿಣ ವಿಭಾಗ ಎಸಿಪಿ ರಾಮರಾವ್ ನೇತೃತ್ವದ ರೌಡಿ ನಿಗ್ರಹದಳ ಬಂಧಿಸಿದೆ.
ಮುಳ್ಳುಗುಡ್ಡೆ ನಿವಾಸಿ ಇಮ್ತಿಯಾಜ್ ಬಂಧಿತ ಆರೋಪಿ. ಈತ ಈ ಹಿಂದೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತಿಲಪದವು ಎಂಬಲ್ಲಿ ಅಜೀಜ್ ಎಂಬಾತನ ಜತೆ ಸೇರಿ ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡಸಿದಾಗ ಪರಾರಿಯಾಗಿದ್ದ.
ಅಜೀಜ್ ಎಂಬಾತನನ್ನು ಬಂಧಿಸಿದ ಪೊಲೀಸರು 10.250 ಕೆಜಿ ಗಾಂಜಾ ಸಹಿತ ವಾಹನವನ್ನು ವಶಪಡಿಸಿಕೊಂಡಿದ್ದರು. ಅಲ್ಲದೇ ಈತ ಮುಳ್ಳುಗುಡ್ಡೆ ಎಂಬಲ್ಲಿ ಪಚ್ಚಿಲ ಅಜೀಜ್ ಎಂಬಾತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದ.
ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಎರಡು ಪ್ರಕರಣಗಳಿಗೆ ಸಂಬಂಧಿಸಿ ಈತ ಪೊಲೀಸರಿಗೆ ಬೇಕಾಗಿದ್ದ. ಇದೀಗ ಈತನನ್ನು ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.