[1]ಮಂಗಳೂರು: ಕೇಂದ್ರ ಸರಕಾರ ಬಿಡುಗಡೆ ಮಾಡಿದ ವಿವಿಧ ಅನುದಾನಗಳನ್ನು ಸದ್ಬಳಕೆ ಮಾಡಲು ರಾಜ್ಯ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸುದೇಶ್ ಶರ್ಮ ಆಪಾದಿಸಿದರು.
ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಕೇಂದ್ರ ಸರಕಾರ ನೀಡಿದ ಒಂದು ಸಾವಿರ ಕೋಟಿ ರೂ. ಅನುದಾನದ ಬಗ್ಗೆ ರಾಜ್ಯ ಸರಕಾರ ಲೆಕ್ಕ ನೀಡಿಲ್ಲ ಎಂದರು.
ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ರಂಗಗಳಿಗೆ ಕೇಂದ್ರ ಬಿಡುಗಡೆಗೊಳಿಸಿದ ಅನುದಾನವು ರಾಜ್ಯದ ಕಟ್ಟಕಡೆಯ ವ್ಯಕ್ತಿಗೆ ತಲುಪುವಲ್ಲಿ ವಿಫಲವಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
22 ಕೋಟಿ ರೂ. ಅನುದಾನವಿದ್ದ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ 910 ಕೋಟಿ ರೂ. ನೀಡಿತ್ತು. 50 ಕೋಟಿ ರೂ. ವೆಚ್ಚದಲ್ಲಿ ಹಜ್ ಭವನ ನಿರ್ಮಿಸಲಾಗಿದೆ. ಆದರೆ ರಾಜ್ಯ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರ ಮೂಗಿಗೆ ತುಪ್ಪ ಮಾತ್ರ ಸವರುತ್ತಿದೆ ಎಂದು ಟೀಕಿಸಿದರು.
ಮುಂಬರುವ ಚುನಾವಣೆ ಯಲ್ಲಿ ರಾಜ್ಯದಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.