[1]ಮಂಗಳೂರು: ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ ಅಮೀನ್ ನೇತೃತ್ವದಲ್ಲಿ ಮತಯಾಚನೆ ಕಾರ್ಯಕ್ರಮ ಬಿರುಸಿನಿಂದ ನಡೆಯಿತು.
ಇಂದು ಬೆಳಗ್ಗೆ ಕೆಪಿಸಿಸಿ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿನಯ್ ಕುಮಾರ್ ಸೊರಕೆ ಪುತ್ರ ದ್ವಿಶಾನ್ ಸೊರಕೆ ತಂದೆ ಪರ ಮತ ಯಾಚಿಸಿದರು. ಬಹುಭಾಷಾ ಚಿತ್ರ ನಟಿ ಚಿರಾಶ್ರೀ ಅಂಚನ್ ಕೂಡ ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭ ಮಾತನಾಡಿದ ದ್ವಿಶನ್ ಸೊರಕೆ ತಂದೆಯವರು ಮಾಡಿದ ಅಭಿವೃದ್ಧಿ ಕಾರ್ಯ ಗೆಲುವಿಗೆ ಮುನ್ನಡೆಯಾಗಲಿದೆ. ತಂದೆಯವರ ಬಗ್ಗೆ ಕ್ಷೇತ್ರದಲ್ಲಿ ಉತ್ತಮ ಅಭಿಪ್ರಾಯಗಳು ವ್ಯಕ್ತವಾಗಿದೆ. ಅವರ ವ್ಯಕ್ತಿತ್ವವೇ ಮತದಾರರನ್ನು ಬಹಳಷ್ಟು ಆಕರ್ಷಿಸಿದೆ. ಅವರ ಅಭಿವೃದ್ಧಿ ಕಾರ್ಯವೇ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಸಾರ್ವಜನಿಕರು ಹೇಳಿದ ಮಾತನ್ನು ಕೇಳಿ ತುಂಬಾ ಸಂತೋಷವಾಯಿತು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಮ್ರಾನ್ ಮಜೂರ್, ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೆಲ್ವಿನ್ ಡಿಸೋಜಾ ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸಂತೋಷ್ ಬಂಗೇರ, 300ಕ್ಕೂ ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಂತಾದವರು ಉಪಸ್ಥಿತರಿದ್ದರು.