[1]ಬೆಂಗಳೂರು : ಬಿಜೆಪಿಯ ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ಬಿಜೆಪಿ ನಿರೀಕ್ಷೆಗೂ ಮೀರಿದ ಬಹುಮತ ಪಡೆಯಲಿದೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಹೇಳಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಬಿ ಶ್ರೀರಾಮುಲು ಅವರು, ಪಕ್ಷೇತರ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಅಂತೆಯೇ ಇನ್ನೂ ಹತ್ತಾರು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದು ವಿಶ್ವಾಸ ಮತ ಯಾಚನೆ ವೇಳೆ ಬಿಜೆಪಿ ಪಕ್ಷ ನಿರೀಕ್ಷೆಗೂ ಮೀರಿದ ಬಹುಮತ ಪಡೆಯಲಿದೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ಶಾಸಕ ಪ್ರತಾಪ್ ಗೌಡ ನಾಪತ್ತೆಯಾಗಿದ್ದು, ಈ ಇಬ್ಬರು ಶಾಸಕರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿಲ್ಲ, ಇದೇ ವಿಚಾರವಾಗಿ ಮಾತನಾಡಿದ್ದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಆನಂದ್ ಸಿಂಗ್ ತಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ ಅವರು ಪ್ರಧಾನಿ ಮೋದಿ ಹಿಡಿತದಲ್ಲಿ ಇರಬಹುದು ಎಂದು ಹೇಳಿದ್ದಾರೆ.
ಇದಕ್ಕೆ ಇಂಬು ನೀಡುವಂತೆ ಮಾತನಾಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಆನಂದ್ ಸಿಂಗ್ ಅವರಿಗೆ ಪ್ರಧಾನಿ ಮೋದಿ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ.