[1]ಬೆಂಗಳೂರು: ಬುಧವಾರ ಸಂಜೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ಶಾಸಕರು ಹೋಗಬಾರದು ಎಂದು ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದೆ.
ನಾಳೆ ಸಂಜೆ 4.30ಕ್ಕೆ ಶಕ್ತಿ ಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಸಿದ್ಧಪಡಿಸಿದ ಬೃಹತ್ ವೇದಿಕೆಯಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಏತನ್ಮಧ್ಯೆ ಹೈಕಮಾಂಡ್ ರವಾನಿಸಿರುವ ಸಂದೇಶವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಕ್ಷದ ಶಾಸಕರಿಗೆ ಮುಟ್ಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಎಚ್ ಡಿಕೆ ಪ್ರಮಾಣವಚನ ಸಮಾರಂಭಕ್ಕೆ ಬಿಜೆಪಿ ಶಾಸಕರು ಗೈರು ಹಾಜರಾಗಲು ನಿರ್ಧರಿಸಿದ್ದಾರೆ.
ಎಚ್ ಡಿಕೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಯಾರೊಬ್ಬರೂ ಹೋಗಬೇಡಿ. ಎಲ್ಲವನ್ನೂ ತಟಸ್ಥವಾಗಿಯೇ ಇದ್ದುಕೊಂಡು ನೋಡುತ್ತಿರಿ ಎಂದು ಹೈಕಮಾಂಡ್ ಬಿಜೆಪಿ ಶಾಸಕರಿಗೆ ಖಡಕ್ ಸಂದೇಶ ರವಾನಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.