- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾಂಗ್ರೆಸ್ ಜೊತೆ ಮೈತ್ರಿಯಲ್ಲಿ ನಾನೊಬ್ಬ ‘ಸಾಂದರ್ಭಿಕ ಶಿಶು’ ಎಚ್‌.ಡಿ.ಕುಮಾರಸ್ವಾಮಿ

Kumara Swamy [1]ಬೆಂಗಳೂರು : ಕಾಂಗ್ರೆಸ್ ಜೆಡಿಎಸ್ ಮೈತ್ರಿಯಲ್ಲಿ  ಮುಖ್ಯಮಂತ್ರಿ ಸ್ಥಾನಕ್ಕೆ ನಾನೊಬ್ಬ ‘ಸಾಂದರ್ಭಿಕ ಶಿಶು’ ಆಗಿದ್ದೇನೆ ಎಂದು ಬುಧವಾರ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿಯಾಗುವಂತೆ ಮನವೊಲಿಸಿದರು. ಆದ ಕಾರಣ ನನ್ನ ವೈಯಕ್ತಿಕ ಹಿತಾಸಕ್ತಿ ಬದಿಗೊತ್ತಿ ಅಧಿಕಾರ ವಹಿಸಿಕೊಂಡೆ. ಹಾಗಾಗಿ ಈಗ ನಾನು ‘ಸಾಂದರ್ಭಿಕ ಶಿಶು’ವಾಗಿದ್ದೇನೆ ಎಂದರು.

ಚುನಾವಣೆಯಲ್ಲಿ ನಮಗೆ ಸ್ಪಷ್ಟ ಬಹುಮತ ಬರದೆ ಇದ್ದರೆ ನಾವು ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವುದಾಗಿ ಹೇಳಿದೆ. ಆದರೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ.

‘ಮುಂದಿನ ದಿನಗಳಲ್ಲಿ ಜೆಡಿಎಸ್‌– ಕಾಂಗ್ರೆಸ್‌ ಹೊಂದಾಣಿಕೆ ಸರಿ ಎನ್ನುವಂತಹ ರೀತಿಯಲ್ಲಿ ಆಡಳಿತ ನಡೆಸುತ್ತೇನೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಬರುವುದಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ರಾಜ್ಯದ ಎಲ್ಲ ವರ್ಗದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ನಮ್ಮದು ಅಸ್ಥಿರ ಸರ್ಕಾರ ಅಲ್ಲ’ ಎಂದರು.

ಸಾಲಮನ್ನಾ : ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ದೊರೆತು, ನಾನು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸಂಪೂರ್ಣ ಸಾಲಮನ್ನಾ ಮಾಡುವುದಾಗಿ ಜನರಿಗೆ ಭರವಸೆ ನೀಡಿದ್ದೆ‌. ಆದರೆ ಸಮಿಶ್ರ ಸರ್ಕಾರ ರಚಿಸಿರುವುದರಿಂದ ಎಲ್ಲರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ ಎಂದರು.

ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಅವರು ಈಗಾಗಲೇ ನೀಲನಕ್ಷೆ ಸಿದ್ಧಪಡಿಸಿದ್ದಾರೆ ಎಂದು ಹೇಳಿದರು.