[1]ಬೆಂಗಳೂರು: ಇಂದು ಸಂಜೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಂಜೆ 6ಗಂಟೆಗೆ ಮಾಜಿ ಸಿಎಂ ಹಾಗೂ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಪಕ್ಷದ ರಾಜ್ಯಮಟ್ಟದ ನಾಯಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಶುಕ್ರವಾರ ನಡೆಯುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಶ್ವಾಸಮತದಲ್ಲಿ ಪಾಲ್ಗೊಳ್ಳಬೇಕೋ, ಬೇಡವೋ ಎಂಬ ಬಗ್ಗೆ ಚರ್ಚೆ ನಡೆಯಲಿದೆ.
ಅಲ್ಲದೇ ಅತ್ಯಂತ ಸಮೀಪದಲ್ಲೇ ಇರುವ ಚುನಾವಣೆಗಳಲ್ಲಿ ಗೆಲ್ಲುವ ಸಂಬಂಧ ಕೈಗೊಳ್ಳಬೇಕಾದ ತಂತ್ರವನ್ನು ಹೆಣೆಯಲಾಗುತ್ತದೆ. ಒಂದರ ಹಿಂದೆ ಒಂದು ಚುನಾವಣೆ ಬರುತ್ತಿದ್ದು, ಸಮ್ಮಿಶ್ರ ಸರ್ಕಾರ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಇವರನ್ನು ಹೇಗೆ ಎದುರಿಸಬೇಕೆಂಬ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಭೆಗೆ ತೆರಳುವ ಮುನ್ನ ಬಿಜೆಪಿಯ ಪರಾಜಿತ ಅಭ್ಯರ್ಥಿಗಳ ಜತೆ ಚರ್ಚಿಸಲಿದ್ದಾರೆ. ಒಂದು ಗಂಟೆ ಸಭೆ ನಡೆಸಿ, ಸೋತ ನಾಯಕರಿಗೆ ಧೈರ್ಯ ತುಂಬುವ ಕಾರ್ಯ ಮಾಡಲಿದ್ದಾರೆ. ಅಲ್ಲದೇ ಅವರ ಸೇವೆಯನ್ನು ಬಳಸಿಕೊಂಡು ಪಕ್ಷವನ್ನು ಇನ್ನಷ್ಟು ಬಲಿಷ್ಠಪಡಿಸುವ ಕಾರ್ಯಕ್ಕೆ ಮುಂದಾಗಲಿದ್ದಾರೆ ಎನ್ನಲಾಗಿದೆ.