[1]ಮಂಗಳೂರು : ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಪರಿಷತ್ ಚುನಾವಣೆಗೆ ಮತದಾನ ಪ್ರಕ್ರಿಯೆ ಮಂಗಳೂರು ಸೇರದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನಿಂದ ನಡೆಯುತ್ತಿದೆ. ಮುಂಜಾನೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರಕ್ಕೆ 23 ಮತಗಟ್ಟೆಗಳು ಹಾಗು ಶಿಕ್ಷಕರ ಕ್ಷೇತ್ರದಲ್ಲಿ 14 ಮತಗಟ್ಟೆ ಸ್ಥಾಪಿಸಲಾಗಿದೆ.
ಬೆಳಿಗ್ಗೆ 11 ರ ಹೊತ್ತಿಗೆ ಪದವೀಧರರ ಕ್ಷೇತ್ರ ದಲ್ಲಿ 22.18, ಶಿಕ್ಷಕರ ಕ್ಷೇತ್ರದಲ್ಲಿ 25.91 ಶೇಕಡಾ ಮತದಾನವಾಗಿದೆ.
ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಬಳಕೆಯನ್ನು ಹಾಗೂ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆಯಿಂದಲೇ ಪದವೀಧರ ಹಾಗು ಶಿಕ್ಷಕ ನೊಂದಾಯಿತ ಮತದಾರರು ಬಿರುಸಿನಿಂದ ಮತಚಲಾವಣೆ ಮಾಡುತ್ತಿದ್ದಾರೆ. ಈ ನಡುವೆ ವಿಧಾನ ಪರಿಷತ್ ನೈರುತ್ಯ ಶಿಕ್ಷಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ತಮ್ಮ ಮತ ಚಲಾಯಿಸಿದರು.