[1]ಮಂಗಳೂರು: ರಾಜ್ಯದ ಗಡಿ ಭಾಗದಿಂದ ಕೇರಳಕ್ಕೆ ಅಕ್ರಮವಾಗಿ ಗೋವು ಸಾಗಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಎಣ್ಮಕಜೆ ಗ್ರಾಮದ ಬಳಪು ಮನೆ ನಿವಾಸಿ ಇಷಾದ್ (21) ಮತ್ತು ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಮರಕ್ಕಿಣಿ ನಿವಾಸಿ ರಶೀದ್ (19) ಬಂಧಿತ ಆರೋಪಿಗಳು.
ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಪೆರುವಾಯಿ ಕಡೆಯಿಂದ ಕೇರಳದ ಕಡೆಗೆ ಜಾನುವಾರು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿದರು. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರು ಹಾಗೂ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.