[1]ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಎಸ್ಐಟಿ ತಂಡ ವಶಕ್ಕೆ ಪಡೆದು ವಿಚಾರಣೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿದೆ ಎನ್ನಲಾಗ್ತಿದೆ.
ಗೌರಿ ಲಂಕೇಶ್ ಹತ್ಯೆ ಸಂಬಂಧ, 15 ದಿನಗಳ ಹಿಂದೆ ವಿಜಯಪುರ ಜಿಲ್ಲೆಯಿಂದ ವಿಜಯ ಕಾಳೆ ಎಂಬುವನನ್ನು ಬಂಧಿಸಿದ್ದ ಎಸ್ಐಟಿ ಅಧಿಕಾರಿಗಳು ಆತನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ವಿಜಯಪುರ ಜಿಲ್ಲೆಯ ಕೆಲವು ಕಡೆ ತನಗೆ ಸಹಾಯ ಮಾಡಿದ್ದ ಇಬ್ಬರ ಬಗ್ಗೆ ಮಾಹಿತಿ ನೀಡಿದ್ದ ಎಂದು ಹೇಳಲಾಗ್ತಿದೆ.
ಇದರ ಆಧಾರದ ಮೇಲೆ ಜಿಲ್ಲೆ ಸಿಂಧಗಿ ಭಾಗದಿಂದ ಇಬ್ಬರನ್ನು ಎಸ್ದ್ಐಟಿ ತಂಡ ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪೊಲೀಸರನ್ನು ಕೇಳಿದರೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಎಸ್ಐಟಿ ತಂಡ ನಡೆಸುತ್ತಿದೆ. ಸ್ಥಳೀಯ ಪೊಲೀಸರಿಗೆ ಅವರು ಈ ಬಗ್ಗೆ ಮಾಹಿತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.