[1]ಬೆಂಗಳೂರು : ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಒಂದು ಹಂತಕ್ಕೆ ಮುಗಿದಿದೆ. ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ.
ಈ ನಡುವೆ ಕೆಲ ಸಚಿವರ ಅಸಮಾಧಾನದ ಹಿನ್ನೆಲೆಯಲ್ಲಿ, ಖಾತೆಗಳನ್ನು ಬದಲಾವಣೆ ಮಾಡಲು ಸಿಎಂ ಚಿಂತನೆ ನಡೆಸಿದ್ದಾರೆ. ಸಚಿವರ ಜೊತೆ ಮಾತುಕತೆ ನಡೆಸಿದ ಬಳಿಕವೇ ಸಿಎಂ ಖಾತೆ ಬದಲಾವಣೆಗೆ ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಉಳಿದಂತೆ ಬೇರೆ ಯಾವುದೇ ಸಚಿವರ ಖಾತೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ.
ಇನ್ನು ಆಡಳಿತಕ್ಕೆ ಚುರುಕು ಮುಟ್ಟಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಕಾಂಗ್ರೆಸ್ನಲ್ಲಿ ಭಿನ್ನಮತ ಬಹುತೇಕ ಶಮನವಾಗಿರುವ ಹಿನ್ನೆಲೆಯಲ್ಲಿ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆಯನ್ನು ನೀಡಲು ಮುಂದಾಗಿದ್ದಾರೆ. ಪ್ರತಿಷ್ಠಿತ ರಾಮನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೇ ನೀಡಲು ಮುಂದಾಗಿದ್ದಾರೆ.
ಸರ್ಕಾರ ಮತ್ತು ಪಕ್ಷಗಳ ನಡುವೆ ಯಾವುದೇ ರೀತಿಯ ತಾರತಮ್ಯ ಉಂಟಾಗದಂತೆ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಸಿಎಂ ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ರವರಿಗೆ ತಮ್ಮ ತವರು ಜಿಲ್ಲೆಯನ್ನು ಉಸ್ತುವಾರಿ ನೀಡುವ ಮೂಲಕ ರಾಜಕೀಯ ಜಾಣ್ಮೆ ಪ್ರದರ್ಶಿಸಿಸಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಉಳಿದಂತೆ ಎಚ್.ಡಿ.ರೇವಣ್ಣಗೆ ಹಾಸನ, ಮೈಸೂರಿಗೆ ಜಿ.ಟಿ.ದೇವೇಗೌಡ, ತುಮಕೂರಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಮತ್ತಿತರ ಸಚಿವರಿಗೆ ಜಿಲ್ಲಾ ಉಸ್ತುವಾರಿಯನ್ನು ಒಂದೆರಡು ದಿನಗಳಲ್ಲಿ ಹಂಚಿಕೆ ಮಾಡಲಿದ್ದಾರೆ. ಇದರಲ್ಲಿ ಕೆಲ ಬದಲಾವಣೆಯಾಬಹುದು ಎಂದು ಮೂಲಗಳು ತಿಳಿಸಿವೆ.