[1]ಬೆಂಗಳೂರು: ಸಮಗ್ರ ಕರ್ನಾಟಕವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿರೋ ಬಜೆಟ್ ಇದು. ಅರ್ಥವಾಗದೇ ಇರೋರಿಗೆ ಏನ್ ಹೇಳೋಣ. ಯಾವ ಜಿಲ್ಲೆ, ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬುದನ್ನು ಚರ್ಚೆ ಮಾಡಲಿ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.
ಜಗಜೀವನ್ರಾಂ ಅವರ 32 ನೇ ಪುಣ್ಯಸ್ಮರಣೆ ಅಂಗವಾಗಿ ಇಂದು ವಿಧಾನಸೌಧದ ಕೆಂಗಲ್ ಗೇಟ್ ಬಳಿಯ ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಡೀಸೆಲ್ ಬೆಲೆ ಏರಿಕೆ ಮಾಡಿದಾಗ ಇವರಿಗೆ ಕಣ್ಣು ಕಾಣಲಿಲ್ಲವೇ ಎಂದು ಪ್ರಶ್ನಿಸಿದರು.
ಬಜೆಟ್ನಲ್ಲಿ ಕರಾವಳಿ ಜಿಲ್ಲೆಗಳ ಕಡೆಗಣನೆ ಆರೋಪದ ಹಿನ್ನೆಲೆಯಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಶಾಸಕರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರ ಬಜೆಟ್ನ ಮುಂದುವರಿದ ಭಾಗ ಇದು. ಹಿಂದೆ ಬಜೆಟ್ನಲ್ಲಿ ಮೀನುಗಾರರ ಸಮಸ್ಯೆಗೆ 150 ಕೋಟಿ ಮೀಸಲಿಟ್ಟಿದ್ದರು. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕ್ಲಸ್ಟರ್ ನಿರ್ಮಾಣಕ್ಕೆ ಹಣ ಮೀಸಲಾಗಿದೆ. ಸಮಗ್ರ ಕರ್ನಾಟಕ ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ. ಇದು ಮೂರ್ನಾಲ್ಕು ಜಿಲ್ಲೆಗಳಿಗೆ ಸೀಮಿತವಾದ ಬಜೆಟ್ ಅಲ್ಲ. ಇದು ಅವರಿಗೆ ಅರ್ಥವಾಗಲ್ಲ ಎಂದರೆ ಏನು ಮಾಡಲು ಆಗುತ್ತೆ. ಸದನದಲ್ಲಿ ಚರ್ಚೆ ನಡೆಸಲಿ, ಅವರಿಗೆ ಉತ್ತರ ಕೊಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಮೇಯರ್ ಸಂಪತ್ ರಾಜ್ ಮತ್ತಿತರರಿದ್ದರು.