[1]ಕಲಬುರಗಿ: ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕೆಂದು ಮುಂದಾಗಿರುವ ಎನ್ಡಿಎಗೆ ಸಡ್ಡು ಹೊಡೆಯಲು ತೃತಿಯ ರಂಗ ರಚನೆ ಮಾಡುವ ಪ್ರಯತ್ನದ ಬಗ್ಗೆ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಥರ್ಡ್ ಫ್ರಂಟ್, ಫೋರ್ಥ್ ಫ್ರಂಟ್ ರಚನೆ ಬಗ್ಗೆ ನನಗೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಎಲ್ಲರನ್ನೂ ಜೊತೆಯಲ್ಲಿ ತೆಗೆದುಕೊಂಡು ಹೋಗಲು ಪ್ರಯತ್ನಿಸುತ್ತದೆ ಎಂದು ಹೇಳಿದರು.
ದೇಶದಲ್ಲಿ ಆರ್ಎಸ್ಎಸ್ ಮತ್ತು ಬಿಜೆಪಿ ಹಾವಳಿ ಹೆಚ್ಚಾಗಿದೆ. ಸಂವಿಧಾನ ರಕ್ಷಣೆ ಮತ್ತು ಪ್ರಜಾಪ್ರಭುತ್ವ ಉಳಿಯಬೇಕಾದರೆ ಬಿಜೆಪಿ ಹಾವಳಿ ನಿಯಂತ್ರಿಸಬೇಕು. ಇದಕ್ಕಾಗಿ ಉಳಿದ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಹೋಗಬೇಕಿದೆ ಎಂದರು.
ಜಮ್ಮು-ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸುವಲ್ಲಿ ಬಿಜೆಪಿ-ಪಿಡಿಪಿ ವಿಫಲವಾಗಿವೆ. ಮಾನವೀಯ ಹಕ್ಕು ರಕ್ಷಣೆ, ಭಯೋತ್ಪಾದನೆಗೆ ಕಡಿವಾಣ ಹಾಕುವ ಅವರ ಭರವಸೆ ಹುಸಿಯಾಗಿವೆ. ಜನರಿಗೆ ಹತ್ತಾರು ಭರವಸೆ ನೀಡಿ ಸರ್ಕಾರ ಮಾಡಿದವರು ಈಗ ಪರಸ್ಪರ ಕೆಸರು ಎರಚಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನರೇ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ ಎಂದು ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಖರ್ಗೆ, ಅಧಿವೇಶನ ನಡೆಯುತ್ತಿದೆ. ಸಿದ್ದರಾಮಯ್ಯ ಸಹ ಸದನದ ಸದಸ್ಯರಾಗಿದ್ದಾರೆ. ಸಿಎಂ ಕುಮಾರಸ್ವಾಮಿ ಸಹ ಸದನದಲ್ಲೇ ಇರ್ತಾರೆ. ಸದನದ ಹೊರಗಿದ್ದು ನಾನು ಪತ್ರದ ಬಗ್ಗೆ ಮಾತಾಡೋದು ಸೂಕ್ತ ಅಲ್ಲ ಎಂದರು.