[1]ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಮುಂದಾಗಿರುವ ಸರ್ಕಾರ, ತನ್ನಿಂದಲೇ ಮೊದಲ್ಗೊಂಡು ಪ್ಲಾಸ್ಟಿಕ್ ಬಳಸದಿರುವ ನಿರ್ಧಾರ ಕೈಗೊಂಡಿದೆ.
ಹೌದು, ಈಗಾಗಲೇ ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಸರ್ಕಾರ ಜಾಗೃತಿ ಮೂಡಿಸುತ್ತಲೇ ಬರುತ್ತಿದೆ. ಆದರೆ ಈ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳೇ ಪ್ಲಾಸ್ಟಿಕ್ ಬಳಕೆಯಲ್ಲಿ ಸ್ವನಿಯಂತ್ರಣ ತರುವಲ್ಲಿ ಹಿಂದೇಟು ಹಾಕುತ್ತಿವೆ. ಇದೀಗ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರ, ಸರ್ಕಾರಿ ಕಚೇರಿಗಳಲ್ಲಿ ಇದರ ಅನುಷ್ಠಾನಕ್ಕೆ ಸುತ್ತೋಲೆ ಹೊರಡಿಸಿದೆ.
ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ಮಾಡದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಈ ನಿಟ್ಟಿನಲ್ಲಿ ಆದೇಶ ಜಾರಿಯಾಗಿದೆ.
ಆದೇಶದ ಸುತ್ತೋಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬದಲಿಗೆ ಸ್ಟೀಲ್ ಲೋಟಗಳನ್ನು ಬಳಸುವಂತೆ ಸೂಚನೆ ನೀಡಿದೆ. ಜೊತೆಗೆ ವಿಧಾನಸೌಧದಲ್ಲಿ ನಡೆಯುವ ಸಚಿವಾಲಯದ ಎಲ್ಲಾ ಸಭೆ ಸಮಾರಂಭದಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ಬದಲು ಸ್ಟೀಲ್ ಲೋಟಗಳಲ್ಲಿ ನೀರು ನೀಡಬೇಕೆಂದು ನಿರ್ದೇಶನ ನೀಡಿದೆ.