[1]ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್, ರಾಷ್ಟ್ರೀಯ ಸೇವಾ ಯೋಜನೆ, ಮಂಗಳೂರು ವಿಶ್ವ ವಿದ್ಯಾನಿಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ “ಸ್ವಚ್ಛ ಗೆಳತಿ ಋತುಸ್ರಾವ ಜಾಗೃತಿ” ಅಭಿಯಾನ ಕಾರ್ಯಕ್ರಮಕ್ಕೆ ಜುಲೈ 28 ರಂದು ಮಂಗಳೂರು ತಾಲೂಕಿನ ಕೋಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಶ್ವ ಮಂಗಳ ವಿದ್ಯಾ ಸಂಸ್ಥೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ಇವರು ದೀಪ ಬೆಳಗಿಸುವ ಮೂಲಕ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅಧ್ಯಕ್ಷರು, “ಋತುಸ್ರಾವ ಸಂದರ್ಭದಲ್ಲಿ ಆಗುವ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿ ಮಾಹಿತಿ ಪಡೆದು ಆತ್ಮ ಸ್ಥೈರ್ಯ ತುಂಬುವ ಕೆಲಸ ಆಗಬೇಕು, ಈ ಬಗ್ಗೆ ಎಲ್ಲರ ಸಹಕಾರ ಅಗತ್ಯ ಹಾಗೆಯೇ ಆಗಸ್ಟ್ 1 ರಿಂದ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಡೆಯುವ “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018″ರ ಸರ್ಕಾರದಿಂದ ನಿಯೋಜಿತ ಸಮೀಕ್ಷಾ ತಂಡ ಗ್ರಾಮಗಳಿಗೆ ಭೇಟಿ ನೀಡಿ ಶಾಲೆಗಳು, ಅಂಗನವಾಡಿ ಕೇಂದ್ರಗಳು, ಸಂತೆ ನಡೆಯುವ ಸ್ಥಳ, ಕುಡಿಯುವ ನೀರು ಸಂಗ್ರಹ ಸ್ಥಳಗಳು, ಪಂಚಾಯತ್ ಕಛೇರಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಗ್ರಾಮದ ಮುಖ್ಯ ಬೀದಿಗಳು ಮತ್ತು ಸಾರ್ವಜನಿಕ ಸ್ಥಳಗಳು ಇತ್ಯಾದಿ ಸ್ವಚ್ಛತೆಯ ಬಗ್ಗೆ ಪರಿಶೀಲಿಸಿ, ಮೌಲ್ಯಮಾಪನ ನಡೆಸಲಿದ್ದಾರೆ.
[2]ಪ್ರತಿಯೊಬ್ಬರೂ ಸ್ವಚ್ಛತೆಯಲ್ಲಿ ತೊಡಗಿ ಜಿಲ್ಲೆಗೆ ಉತ್ತಮ ಶ್ರೇಣಿ ದೊರಕಿಸಿಕೊಡುವಂತೆ ಈ ಮೂಲಕ ಕೇಳಿಕೊಂಡರು”.
ಕಾರ್ಯಕ್ರಮದ ಮುಖ್ಯ ಅತಿಥಿಯಾದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಂ. ಆರ್. ರವಿ, ಇವರು ಸ್ವಚ್ಛತೆಯ ಮಹತ್ವ ಮತ್ತು ಅವಶ್ಯಕತೆ ಹಾಗೂ ಯೋಜನೆಯ ರೂಪು ರೇಶೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಕುಲಸಚಿವರು ಮಂಗಳೂರು ವಿಶ್ವ ವಿದ್ಯಾನಿಲಯ ಡಾ. ನಾಗೇಂದ್ರ ಪ್ರಸಾದ್ ಇವರು ಸ್ವಚ್ಛ ಗೆಳತಿ ಮತ್ತು ವನಮಹೋತ್ಸವ ಮತ್ತು ಸ್ವಚ್ಛ ಸರ್ವೇಕ್ಷಣೆಯಲ್ಲಿ ಕೊಣಾಜೆ ಗ್ರಾಮ ಪಂಚಾಯತ್, ವಿದ್ಯಾ ಸಂಸ್ಥೆಗಳ ಸಹಕಾರದಲ್ಲಿ ಸಂಪೂರ್ಣವಾಗಿ ತೊಡಗಬೇಕೆಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಗಟ್ಟಿ ಹಾಗೂ ಧನಲಕ್ಷ್ಮಿ ಗಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಪದ್ಮಾವತಿ, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೌಕತ್ ಅಲಿ, ಗ್ರಾಮ ಪಂಚಾಯತಿನ ಸರ್ವ ಸದಸ್ಯರು, ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ, ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ಸಂಯೋಜಕರು ವಿನಿತಾ ರೈ, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಂಯೋಜಕರು ಮತ್ತು ಸಮಾಲೋಚಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.