[1]ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಳ್ಳ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡಲೇ ದೇಶದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರಿಗೆ ರಾಹುಲ್ ಗಾಂಧಿ ಕಳ್ಳ ಎಂದು ಕರೆದಿರುವುದು ಕಾಂಗ್ರೆಸ್ ಪಕ್ಷಕ್ಕೆ ಶೋಭೆ ತರುವುದಿಲ್ಲ. ಈ ಹಿಂದಿನ ಯಾವ ಕಾಂಗ್ರೆಸ್ ಅಧ್ಯಕ್ಷರು ಈ ರೀತಿ ನಡೆದುಕೊಂಡಿರಲಿಲ್ಲ. ಆದ್ರೆ ರಾಹುಲ್ ಗಾಂಧಿ ಬಚ್ಚಾ ರೀತಿ ವರ್ತಿಸಿ ಬೇಜವಾಬ್ದಾರಿ ತೋರಿಸಿದ್ದಾರೆ. ರಾಹುಲ್ ಗಾಂಧಿ ಕೂಡಲೇ ದೇಶದ ಕ್ಷಮೆ ಯಾಚಿಸಬೇಕು ಎಂದರು.
ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಸಿಎಂ ಕುಮಾರಸ್ವಾಮಿ ಹೇಳಿಕೆ ಬಗ್ಗೆ ದೂರು ನೀಡುತ್ತೇವೆ. ಕುಮಾರಸ್ವಾಮಿ ಜನರನ್ನು ಹುಚ್ಚೆಬ್ಬಿಸುತ್ತಿದ್ದಾರೆ. ಅವರ ಕುಮ್ಮಕ್ಕಿನಿಂದ ನಿನ್ನೆ ಯಡಿಯೂರಪ್ಪನವರ ಮನೆಗೆ ನುಗ್ಗುವ ಪ್ರಯತ್ನವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಿದ್ದಾರೆ. ಈಗ ಸಿಎಂ ತಮ್ಮ ಹೇಳಿಕೆಗೆ ಹೊಸ ಅರ್ಥ ಕೊಡಲು ಪ್ರಯತ್ನಿಸುತ್ತಿರುವುದು ಅವರ ಮಾನಸಿಕತೆಯನ್ನು ತೋರಿಸುತ್ತದೆ ಎಂದು ಶೋಭಾ ಟೀಕಿಸಿದರು.