[1]ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ಕೇಂದ್ರ ಸರ್ಕಾರ ಮತ್ತು ಲೋಕಸಭೆ ಚುನಾಯಿತ ಜನಪ್ರತಿನಿಧಿ ಆದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದರು.
ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರ ಇರುವಾಗ ಈ ಯೋಜನೆ ಪ್ರಾರಂಭವಾಗಿದ್ದು, ಎಲ್ಎನ್ಟಿ ಗುತ್ತಿಗೆದಾರ ಕಂಪೆನಿಯು ಈ ಕಾಮಗಾರಿಯನ್ನು ವಹಿಸಿಕೊಂಡಿತ್ತು. ರಸ್ತೆ ರಚನೆ ಮಾಡುವ ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೂಡಾ ಪೂರ್ಣಗೊಂಡಿದೆ. 36 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಪರಿವರ್ತನೆ ಮಾಡುವ ಕೆಲಸವೂ ಪೂರ್ಣಗೊಂಡಿದೆ. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರ ಕಂಪೆನಿಯ ನಡುವಿನ ಮನಸ್ತಾಪದಿಂದ ಈ ಕಾಮಗಾರಿ ನಿಂತಿದೆ ಎಂದು ಆರೋಪಿಸಿದರು.
[2]ಅರ್ಧಂಬರ್ಧ ಕಾಮಗಾರಿ ನಡೆಸಲಾದ ಈ ರಸ್ತೆಯಿಂದ ವಾಹನಗಳ ಓಡಾಡಕ್ಕೆ ತೊಂದೆರೆಯಾಗುತ್ತಿದೆ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ತೊಡಕಾಗುವುದು ಮಾತ್ರವಲ್ಲದೆ ಜೀವಹಾನಿಯಾಗುವ ಸಂಭವವೂ ಇದೆ. ಆದ್ದರಿಂದ ಈ ಬಗ್ಗೆ ಕೇಂದ್ರ ಸರ್ಕಾರ ಮುತುವರ್ಜಿ ವಹಿಸಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.
ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿಯಲ್ಲಿ ಬುದ್ಧಿವಂತರ ಜಿಲ್ಲೆಯಲ್ಲಿ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವ ಕೆಲಸವನ್ನು ಕೇಂದ್ರ ಸರ್ಕಾರದ ಪ್ರತಿನಿಧಿ ಮಾಡುತ್ತಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು.