[1]ಮಂಗಳೂರು: ನಗರದ ತೋಟ ಬೆಂಗ್ರೆಯಲ್ಲಿ ಯುವತಿಯ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೋ ಪ್ರಕರಣ ದಾಖಲಿಸಿ ಆರೋಪಿಗಳನ್ನು ಶೀಘ್ರ ಬಂಧಿಸಿದ ಮಂಗಳೂರು ನಗರ ಪೊಲೀಸರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಒಂದು ಲಕ್ಷ ರೂ. ಚೆಕ್ ನೀಡಿ ಅಭಿನಂದಿಸಿದರು.
ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್.ಸುರೇಶ್ ಅವರಿಗೆ ಸಚಿವರು ಚೆಕ್ ಹಸ್ತಾಂತರಿಸಿದರು. ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದಾಗ, ತಮಗೆ ದೂರು ಬಾರದೆ ಇದ್ದರೂ ಮಾಹಿತಿ ಸಂಗ್ರಹಿಸಿ ಸುಮೊಟೋ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯವನ್ನು ಸಚಿವರು ಶ್ಲಾಘಿಸಿದರು.
ತಮ್ಮ ಸಂಬಳದ ಹಣವನ್ನು ದ.ಕ ಜಿಲ್ಲೆಯ ನಾಗರಿಕರ ಪರವಾಗಿ ಪೊಲೀಸ್ ಇಲಾಖೆಗೆ ನೀಡಿದ ಅವರು, ಆರೋಪಿಗಳನ್ನು ಬಂಧಿಸುವಲ್ಲಿ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಯನ್ನು ಅಭಿನಂದಿಸಿದರು.