[1]ಮಂಗಳೂರು: ರಸ್ತೆ ಸಾರಿಗೆ ಸಮಸ್ಯೆಗಳನ್ನು ದಾಖಲಿಸಲು ಸಾರ್ವಜನಿಕರ ಬಳಕೆಗಾಗಿ ದ.ಕ. ಜಿಲ್ಲಾಡಳಿತದ ವತಿಯಿಂದ ನೂತನ ಆ್ಯಪ್ನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಸ್ತೆ, ಸಾರಿಗೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ರಸ್ತೆ ಸಾರಿಗೆ ಇಲಾಖೆಯ ದೂರುಗಳನ್ನು ದಾಖಲಿಸಲು ಮತ್ತು ಮಾಹಿತಿ ವಿನಿಮಯಕ್ಕಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಚಿಂತನೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಾರ್ವಜನಿಕರು ಬಳಸಬಹುದಾದ ಆ್ಯಪ್ಅನ್ನು ಮುಂದಿನ ನಾಲ್ಕು ತಿಂಗಳ ಒಳಗಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಸ್ತೆ ಸಾರಿಗೆ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ವೇಳೆ ನಾಗರಿಕರೊಬ್ಬರು ಮಾತನಾಡಿ ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯವನ್ನು ತೆಗೆದುಹಾಬೇಕು ಮಂಗಳೂರು ನಗರಗಳಲ್ಲಿ ನಿರ್ಮಾಣಗೊಂಡ ಈಗಿನ ಬಸ್ ಸ್ಟ್ಯಾಂಡ್ ಗಳು ಬಹಳ ಎತ್ತರವಾಗಿದ್ದು ಬಿಸಿಲು ಮತ್ತು ಮಳೆಗೆ ಇದರೊಳಗೆ ನಿಲ್ಲಲು ಅಸಾಧ್ಯವಾಗಿದ್ದು, ಇದನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಇದಕ್ಕೆಲ್ಲಾ ಪರಿಹಾರ ಒದಗಿಸುವ ಕಾರ್ಯಕೈಗೊಳ್ಳಲಾಗುವುದು ಎಂದು ಹೇಳಿದರು.