ಮಂಗಳೂರು: ಮೀನು ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಮೀನುಗಾರ ಮಹಿಳೆಯರು ಮತ್ತು ಮಂಗಳೂರು ಮೀನುಗಾರ ಮಹಿಳೆಯರ ಮಾರಾಟ ಮಂಡಳಿ ಜೊತೆಗೂಡಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಂಗಳೂರು ಸ್ಮಾರ್ಟ್ ಸಿಟಿ ಆಗುತ್ತಿರುವ ಹಿನ್ನೆಲೆಯಲ್ಲಿ ಮೀನು ಮಾರುಕಟ್ಟೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅದನ್ನು ಸ್ಟೇಟ್ ಬ್ಯಾಂಕ್ ಸರ್ವಿಸ್ ಬಸ್ ಸ್ಟ್ಯಾಂಡ್ ಪಕ್ಕದಿಂದ ಸ್ಥಳಾಂತರಿಸುವ ಉದ್ದೇಶವಿದ್ದು, ಇದಕ್ಕೆ ವಿರೋಧ ವ್ಯಕ್ತವಾಗಿದೆ.
ಪ್ರತಿಭಟನೆಯಲ್ಲಿ ಮೀನುಗಾರ ಮಹಿಳೆಯರು ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಿರುವ ಮೀನು ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಬೇಕು. ಅಲ್ಲದೆ ಯಾವುದೇ ಕಾರಣಕ್ಕೂ ಇಲ್ಲಿಂದ ನಮ್ಮನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದರು.
ಈ ಸಂದರ್ಭ ಮೀನು ಮಾರುವ ಮಹಿಳೆಯರು ತಮ್ಮ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ತನಕ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಂಡು ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿದ್ದರು. ಪ್ರತಿಭಟನೆಯಲ್ಲಿ ಮೀನುಗಾರ ಮಹಿಳೆಯರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಯಾವುದೇ ಕಾರಣಕ್ಕೂ ನಾವು ಇಲ್ಲಿಂದ ಕದಲುವುದಿಲ್ಲ ಎಂದು ಘೋಷಣೆ ಕೂಗಿದರು.
ಮೀನು ಮಾರಾಟ ಮಾಡುವ ಮಹಿಳೆಯರು ಇಂದು ಪ್ರತಿಭಟನೆಯಲ್ಲಿ ತೊಡಗಿಸಿಕೊಂಡ ಹಿನ್ನೆಲೆಯಲ್ಲಿ ಮೀನು ಮಾರಾಟ ಸ್ಥಗಿತಗೊಂಡಿತ್ತು. ಈ ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಚಂಗಪ್ಪ, ಭಾಸ್ಕರ್ ಚಂದ್ರ ಶೆಟ್ಟಿ ಮತ್ತು ಮೀನುಗಾರ ಮಹಿಳೆಯರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English