ಬೆಂಗಳೂರು : 2012ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಗುರುವಾರ ಪ್ರಕಟಿಸಿದ್ದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ, ಈ ಬಾರಿ ಶೇ.81.16ರಷ್ಟು ಬಾಲಕಿಯರು ಉತ್ತೀರ್ಣರಾಗಿ ಮೇಲುಗೈ ಸಾಧಿಸಿದ್ದು, ಶೇ.71.73ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ. ಇದು ಕಳೆದ ಬಾರಿಗಿಂತ ಶೇ.2.23ರಷ್ಟು ಫಲಿತಾಂಶ ಹೆಚ್ಚಳವಾದಂತಾಗಿದೆ ಎಂದು ವಿವರಿಸಿದರು.
ಪ್ರತಿವರ್ಷದಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ 76.13ರಷ್ಟು ಮಂದಿ ತೇರ್ಗಡೆಯಾಗಿದ್ದಾರೆ. ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ಶಿರಸಿ ದ್ವಿತೀಯ ಸ್ಥಾನ ಹಾಗೂ ಹಾಸನ ತೃತೀಯ ಸ್ಥಾನ ಪಡೆದಿದ್ದು, ಬೀದರ್ ಕೊನೆಯ ಸ್ಥಾನ ಪಡೆದಿದೆ.
ದ.ಕ ಜಿಲ್ಲೆಯ ಬಂಟ್ವಾಳ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ನವ್ಯಾ ಆರ್ ಶೆಟ್ಟಿ 625 ಅಂಕಗಳಲ್ಲಿ 623 ಅಂಕ ಗಳಿಸಿ ರಾಜ್ಯದಲ್ಲೆ ಪ್ರಥಮ ಸ್ಥಾನಗಳಿಸಿದ್ದಾರೆ. ಸುರತ್ಕಲ್ ವಿದ್ಯಾದಾಯಿನಿ ಆಂಗ್ಲ ಮಾಧ್ಯಮ ಶಾಲೆಯ ಪಲ್ಲವಿ ಕೆ ರಾವ್ 625ರಲ್ಲಿ 621 ಅಂಕಗಳಿಸುವ ಮೂಲಕ ದ್ವಿತೀಯ ಸ್ಥಾನದಲ್ಲಿದ್ದಾರೆ.
ಈ ಬಾರಿಯೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಆದರೆ ರಾಜ್ಯದ 47 ಶಾಲೆಗಳು ಶೂನ್ಯ ಫಲಿತಾಂಶ ಪಡೆದಿರುವುದಾಗಿ ಹೇಳಿದರು. ಯಾವುದೇ ಕಾರಣಕ್ಕೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅನುತ್ತೀರ್ಣರಾಗಿದ್ದರೆ ಅಂತಹವರು ಧೈರ್ಯಗುಂದದೆ ಮುಂದಿನ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿಸಬಹುದು. ಹಾಗಂತ ಆತ್ಮಹತ್ಯೆಗೆ ಮುಂದಾಗಬೇಡಿ ಎಂದು ಈ ಸಂದರ್ಭದಲ್ಲಿ ಮನವಿ ಮಾಡಿದರು. ಶುಕ್ರವಾರ ಬೆಳಿಗ್ಗೆ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕಾಗೇರಿ ತಿಳಿಸಿದರು.
Click this button or press Ctrl+G to toggle between Kannada and English