[1]ಮಂಗಳೂರು : ಮಂಗಳೂರು ದಕ್ಷಿಣ ರೌಡಿ ನಿಗ್ರಹದಳದ ಪೊಲೀಸರು ಕಾರ್ಯಾಚರಣೆ ನಡೆಸಿ ತೊಕ್ಕೊಟ್ಟು ಬಳಿ ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿದ್ದಾರೆ.
ವಾಮಂಜೂರು ನಿವಾಸಿ ಮುಹಮ್ಮದ್ ಮುಸ್ತಫ(21), ಉಳಾಯಿಬೆಟ್ಟು ನಿವಾಸಿ ಹಸನ್ (20), ಮೂಡುಶೆಡ್ಡೆ ಶಿವನಗರ ನಿವಾಸಿ ಫೈಝಲ್ (36) ಬಂಧಿತ ಆರೋಪಿಗಳು.
ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳಿಂದ ನಾಲ್ಕು ಕೆ.ಜಿ. ಗಾಂಜಾ, ಸ್ಕೂಟರ್ವೊಂದು ಸೇರಿದಂತೆ ಒಟ್ಟು ಒಂದು ಲಕ್ಷ ರೂ. ಮೌಲ್ಯದ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಪೈಕಿ ಮುಸ್ತಫ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ ಪ್ರಕರಣ ಸೇರಿದಂತೆ ಮೂರು ಪ್ರಕರಣ, ಆರೋಪಿ ಫೈಝಲ್ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ, ಕಳ್ಳತನ ಮತ್ತು ಗಾಂಜಾ ಮಾರಾಟ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲವರು ಶಾಮೀಲಾಗಿದ್ದು, ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀಗಣೇಶ್ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಟಿ. ಕೋದಂಡರಾಮ್ ನೇತೃತ್ವದ ಮಂಗಳೂರು ದಕ್ಷಿಣ ಉಪವಿಭಾಗದ ರೌಡಿ ನಿಗ್ರಹದಳದ ಸಿಬ್ಬಂದಿ ಮತ್ತು ಉಳ್ಳಾಲ ಪೊಲೀಸ್ ನಿರೀಕ್ಷಕ ಗೋಪಿಕೃಷ್ಣ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.