ಬೆಂಗಳೂರು : ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಪೊಲೀಸರು ಕೆಲವೊಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು-ಸುದ್ದಿ ಹರಡದಂತೆ ಸೂಚನೆ ನೀಡಿದ್ದಾರೆ.
ಪರ-ವಿರೋಧ ತೀರ್ಪು ಬಂದರೆ ವಿಜಯೋತ್ಸವ ಆಚರಿಸುವುದಾಗಲೀ ಅಥವಾ ಘೋಷಣೆ ಕೂಗುವುದನ್ನಾಗಲಿ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಾಪ್, ಟ್ವಿಟ್ಟರ್ ಹಾಗೂ ಇನ್ನಿತರೆ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು, ಪೋಸ್ಟ್ಗಳನ್ನು, ಕಮೆಂಟ್ಗಳನ್ನು ಹಾಕಬೇಡಿ.
ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿದಂತೆ ಕಟ್ಟು ನಿಟ್ಟಿನಿಂದ ನಿಯಮಗಳು ಅನ್ವಯವಾಗಲಿದ್ದು, ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಾಪ್, ಟ್ವಿಟ್ಟರ್ ಹಾಗೂ ಇನ್ನಿತರೆ ಜಾಲತಾಣಗಳ ಮೇಲೆ ಸೂಕ್ತ ನಿಗಾವಹಿಸಲಾಗಿದೆ.
ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ತಪ್ಪು ಸಂದೇಶಗಳನ್ನು ಯಾರಿಗೂ ರವಾನಿಸಬೇಡಿ, ಈ ಬಗ್ಗೆ ಮಕ್ಕಳು, ಸಹೋದರ, ಸಹೋದರಿಯರು, ಅಕ್ಕಪಕ್ಕದವರು ಹಾಗೂ ಸಂಬಂಧಿಕರಿಗೆ ಈ ಮಾಹಿತಿಯನ್ನು ತಿಳಿಸಿ.
ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮಕ್ಕೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಪೋಸ್ಟ್ ಅಥವಾ ವೀಡಿಯೋ ಸಂದೇಶಗಳನ್ನು ಪೋಸ್ಟ್ ಮಾಡಬೇಡಿ.
ಯಾವುದೇ ರಾಜಕೀಯ ಹಾಗೂ ಧಾರ್ಮಿಕ ವಿಷಯದ ಬಗ್ಗೆ ನಿಂದನೀಯ ಸಂದೇಶಗಳನ್ನು ಕಳುಹಿಸುವುದು, ರವಾನಿಸುವುದು ಅಪರಾಧವಾಗಿದ್ದು ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ. ಸುದ್ದಿಯ ಮೂಲವನ್ನು ಪರಿಶೀಲಿಸದೇ ಅದನ್ನು ಇತರರಿಗೆ ಕಳುಹಿಸಲು ಹೋಗಬೇಡಿ.
ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿಚಾರವು ದೇಶದ ಅತೀ ಗಂಭೀರ ವಿಚಾರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ಸದಸ್ಯರುಗಳು ಗಂಭೀರವಾಗಿ ಯೋಚಿಸಿ, ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವಂತಹ ಸಂದೇಶಗಳನ್ನು ಹಾಕಬೇಡಿ.
ಸಾಮಾಜಿಕ ಜಾಲತಾಣಗಳಲ್ಲಿ ಬಂದಂತಹ ಪ್ರಚೋದನಾತ್ಮಕ ಸಂದೇಶಗಳನ್ನು ಬೇರೆ ಗ್ರೂಪ್ಗಳಿಗೆ ಮರು ಕಳುಹಿಸುವುದು (Forward) ಕಂಡುಬಂದಲ್ಲಿ, ಸಂದೇಶವನ್ನು ಕಳುಹಿಸಿದ ವ್ಯಕ್ತಿ ಮತ್ತು ಗ್ರೂಪ್ ಅಡ್ಮಿನ್ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು.
ನ್ಯಾಯಾಲಯದ ತೀರ್ಪನ್ನು ನಿಂದಿಸಬೇಡಿ. ತೀರ್ಪಿನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಅಭಿಪ್ರಾಯವನ್ನು ಎಲ್ಲೂ ಹಂಚಿಕೊಳ್ಳಬೇಡಿ.
ತಪ್ಪದೇ ಈ ಮೇಲ್ಕಂಡ ವಿಚಾರವನ್ನು ಎಲ್ಲರಿಗೂ ತಿಳಿಸಿ, ವಿಷಯದ ಸಂಬಂಧ ನಿಯಮಗಳ ಬಗ್ಗೆ ಗಮನಹರಿಸಿ ಹಾಗೂ ಗುಂಪುಗಳು ಸದಾ ಜಾಗರೂಕರಾಗಿ ಇರಿ. ಮಾದರಿ ಸಮಾಜಕ್ಕೆ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿ ಎಂದು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.