ಪುತ್ತೂರು : ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ಮಂಗಳವಾರ ಸಂಜೆ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.
ಕಲ್ಲಂದಡ್ಕ ನಿವಾಸಿ ಅಬ್ದುಲ್ ಖಾದರ್(36) ಎಂಬವರ ಮೇಲೆ ಮಂಗಳವಾರ ಸಂಜೆ ಕಾರಿನಲ್ಲಿ ಬಂದ ತಂಡವೊಂದು ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಖಾದರ್ರ ಎದೆ ಭಾಗಕ್ಕೆ ಗುಂಡು ತಗುಲಿದೆ.
ಗಾಯಾಳು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ತನಿಖೆಗೆ ಪುತ್ತೂರು ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಇದೀಗ ತನಿಖಾ ತಂಡವು ಓರ್ವನನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ.