ಮಂಗಳೂರು : ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಕ್ಷಮತೆ ಕಾಪಾಡಿಕೊಳ್ಳಲು ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯಪಟ್ಟರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತಕ ಸಂಘದ ವತಿಯಿಂದ ಭಾನುವಾರ ನಗರ ನೆಹರೂ ಮೈದಾನದ ಬಳಿಯ ಫುಟ್ಬಾಲ್ ಮೈದಾನದಲ್ಲಿ ನಡೆದ ಪತ್ರಕರ್ತರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ದಿನನಿತ್ಯ ಸುದ್ದಿಯ ಬೆನ್ನತ್ತಿ ಹೋಗುವ ಪತ್ರಕರ್ತರು ಕ್ರೀಡಾಕೂಟ ಆಯೋಜಿಸುತ್ತಿರುವುದು ಒಳ್ಳೆಯ ವಿಷಯ. ಮಾನಸಿಕ ನೆಮ್ಮದಿಗೂ ಕ್ರೀಡೆ ಪೂರಕವಾಗಿದೆ. ಒಲ್ಲರನ್ನು ಒಗ್ಗೂಡಿಸುವ ಇಂತಹ ಕ್ರೀಡಾಕೂಟಗಳು ನಿರಂತರವಾಗಿ ನಡೆಯಲಿ ಎಂದು ಆಶಿಸಿದರು.
ಎಸ್ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ, ವಿಜಯಕರ್ನಾಟಕ ಪತ್ರಿಕೆಯ ಸ್ಥಾನೀಯ ಸಂಪಾದಕ ಯು.ಕೆ.ಕುಮಾರನಾಥ್, ಸಿಟಿಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಭಾಸ್ಕರ ರೈ ಕಟ್ಟ ವಂದಿಸಿದರು.
ಸುದ್ದಿ ಬಿಡುಗಡೆ ತಂಡಕ್ಕೆ ಟ್ರೋಫಿ
ಕ್ರಿಕೆಟ್ನ ಫೈನಲ್ನಲ್ಲಿ ಸುದ್ದಿಬಿಡುಗಡೆ ತಂಡ ವಿ4 ವಾಹಿನಿ ತಂಡವನ್ನು ಸೋಲಿಸುವ ಮೂಲಕ 2019ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ವಿ4 ವಾಹಿನಿ ತಂಡ ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.