ಶರತ್ ಬಚ್ಚೇಗೌಡರಿಗೆ ಬಿಜೆಪಿ ಪಕ್ಷದೊಳಗೆ ಪ್ರವೇಶ ಇಲ್ಲ : ಎಂಟಿಬಿ ನಾಗರಾಜ್ ಮನವಿಗೆ ಸ್ಪಂದಿಸಿದ ಬಿಎಸ್​ವೈ

11:25 AM, Tuesday, December 10th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

BSY

ಬೆಂಗಳೂರು : ಹೊಸಕೋಟೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶರತ್ ಬಚ್ಚೇಗೌಡ ಅವರನ್ನು “ನಾ ಇರುವವರೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮಾತೇ ಇಲ್ಲ” ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಂಟಿಬಿ ನಾಗರಾಜ್ ಅವರಿಗ ಮಾತು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಶರತ್ ಬಚ್ಚೇಗೌಡ ಚಿಕ್ಕಬಳ್ಳಾಪುರ ಸಂಸದ ಹಿರಿಯ ಬಿಜೆಪಿ ನಾಯಕ ಬಿ.ಎನ್. ಬಚ್ಚೇಗೌಡ ಅವರ ಮಗ. ಬಚ್ಚೇಗೌಡ ಒಪ್ಪಿಗೆ ಸೂಚಿಸಿದ ನಂತರವೇ ಎಂಟಿವಿ ನಾಗರಾಜ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಲಾಗಿತ್ತು. ಆದರೂ, ಹಿರಿಯ ನಾಯಕರ ಮಾತಿಗೆ ಬೆಲೆ ಕೊಡದೆ ಶರತ್ ಬಚ್ಚೇಗೌಡ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಎಂಟಿಬಿ ಸೋಲಿಗೆ ಕಾರಣರಾಗಿದ್ದಾರೆ.

ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿ ಕರೆದು ಸಂಸದ ಬಚ್ಚೇಗೌಡ ಅವರ ವಿರುದ್ಧ ಕಿಡಿಕಾರಿದ್ದ ಎಂಟಿಬಿ ನಾಗರಾಜ್, ಶರತ್ ಬಚ್ಚೇಗೌಡ ಅವರನ್ನು ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಬಾರದು ಎಂದು ಸಿಎಂ ಯಡಿಯೂರಪ್ಪ ಅವರಿಗೆ ದೀರ್ಘ ಪತ್ರ ಬರೆದು ಒತ್ತಾಯಿಸಿದ್ದರು.

ನಂತರ ಎಂಟಿಬಿ ನಾಗರಾಜ್ ಅವರನ್ನು ಭೇಟಿ ಮಾಡಿ ಭರವಸೆ ನೀಡಿರುವ ಬಿ.ಎಸ್. ಯಡಿಯೂರಪ್ಪ, “ನಾನು ಮುಖ್ಯಮಂತ್ರಿಯಾಗಲು ನೀವೆ ಕಾರಣ. ನೀವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದೆ ಇದ್ದರೆ ಇಂದು ನಾನು ಸಿಎಂ ಆಗಲು ಸಾಧ್ಯವಿರುತ್ತಿರಲಿಲ್ಲ. ಹೀಗಾಗಿ ನಿಮ್ಮನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ವಿಧಾನ ಪರಿಷತ್ಗೆ ನಾಮ ನಿರ್ದೇಶನ ಮಾಡುವ ಮೂಲಕ ನಿಮಗೆ ಸಚಿವ ಸ್ಥಾನ ನೀಡಲಾಗುವುದು” ಎಂದು ಮಾತು ನೀಡಿದ್ದಾರೆ ಎನ್ನಲಾಗುತ್ತಿದೆ.

ಅಲ್ಲದೆ, “ಶರತ್ ಬಚ್ಚೇಗೌಡ ನನ್ನ ಮಾತಿಗೆ ಕಿಂಚಿತ್ತೂ ಬೆಲೆ ಕೊಡದೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಹೀಗಾಗಿ ನಾ ಇರುವ ವರೆಗೆ ಅವರಿಗೆ ಬಿಜೆಪಿ ಪಕ್ಷದ ಒಳಗೆ ಮತ್ತೆ ಪ್ರವೇಶವಿಲ್ಲ. ಯಾವುದೇ ಸ್ಥಾನಮಾನವನ್ನೂ ನೀಡಲಾಗುವುದಿಲ್ಲ ಎಂದು ಎಂಟಿಬಿ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English