ಪೌರತ್ವ ಕಾಯ್ದೆ ಬಗ್ಗೆ ಮುಸ್ಲಿಮರಿಗೆ ಆತಂಕ ಬೇಡ : ಶಾಸಕ ಕೆ.ಜಿ.ಬೋಪಯ್ಯ ಸ್ಪಷ್ಟನೆ

9:45 AM, Monday, January 6th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

bommayya

ಮಡಿಕೇರಿ : ಮುಸಲ್ಮಾನರು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಯಾವುದೇ ಆತಂಕ ಮತ್ತು ಗೊಂದಲ ಪಡುವ ಅಗತ್ಯವಿಲ್ಲವೆಂದು ಶಾಸಕ ಕೆ.ಜಿ.ಬೋಪಯ್ಯ ಸ್ಪಷ್ಟಪಡಿಸಿದ್ದಾರೆ.

ಮಡಿಕೇರಿ ನಗರ ಬಿಜೆಪಿ ಘಟಕದ ವತಿಯಿಂದ ಪೌರತ್ವ ಕಾಯ್ದೆ ಬೆಂಬಲಿಸಿ ಜಾಗೃತಿ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ವಿನಾಕಾರಣ ನಡೆಯುತ್ತಿರುವ ಅಪಪ್ರಚಾರಗಳಿಗೆ ಕಿವಿಗೊಡದೆ ಪೌರತ್ವ ತಿದ್ದುಪಡಿ ವಿಧೇಯಕದ ಬಗ್ಗೆ ಸಮಗ್ರ ಮಾಹಿತಿಯನ್ನು ಅರ್ಥ ಮಾಡಿಕೊಂಡಾಗ ಇದು ಮುಸ್ಲಿಂ ವಿರೋಧಿ ಅಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಅಪಪ್ರಚಾರ ಮಾಡುತ್ತಾ, ಕಾಯ್ದೆ ವಿರುದ್ದ ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ. ಭಾರತ ದೇಶಕ್ಕೆ ಅನುಗುಣವಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲಾಗಿದೆ. ಈ ನೆಲದ ಕಾನೂನನ್ನು ಗೌರವಿಸುವುದು ಪ್ರತಿ ಭಾರತೀಯರ ಆದ್ಯ ಕರ್ತವ್ಯವಾಗಬೇಕು ಎಂದು ಬೋಪಯ್ಯ ತಿಳಿಸಿದರು.
ಬಾಂಗ್ಲಾ, ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾದವರಿಗೆ ಭಾರತದಲ್ಲಿ ಆಶ್ರಯ ನೀಡಲಾಗುತ್ತಿದೆ. ಎನ್.ಆರ್.ಸಿ ಕಾಯ್ದೆ ಕೇವಲ ಪ್ರಸ್ತಾಪದಲ್ಲಿದ್ದು ಈ ವಿಚಾರವಿಟ್ಟುಕೊಂಡು ಮುಸ್ಲಿಮರಲ್ಲಿ ಕೆಲವು ಸಂಘಟನೆ ಹಾಗೂ ಪಕ್ಷಗಳು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾಯ್ದೆಯ ಮಹತ್ವದ ಕುರಿತು ಬೂತ್ ಮಟ್ಟ, ಪ್ರತಿ ಗ್ರಾಮ ಹಾಗೂ ಮನೆ ಮನೆಗಳಿಗೆ ತೆರಳಿ ಅರಿವು ಮೂಡಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕೆಂದು ಬೋಪ್ಪಯ್ಯ ಹೇಳಿದರು.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಕಾಯ್ದೆ ತಿದ್ದುಪಡಿಗೆ ಅನುಮೋದನೆ ದೊರೆತ್ತಿದ್ದು, ಕ್ಷುಲ್ಲಕ ರಾಜಕಾರಣಕ್ಕೆ ವಿಪಕ್ಷಗಳು ದೇಶದಲ್ಲಿ ಅಶಾಂತಿ ಮೂಡಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೌರತ್ವ ತಿದ್ದುಪಡಿ ವಿಧೇಯಕ ಹಿಂದುತ್ವ ಕಾಯ್ದೆಯಲ್ಲ, ರಾಷ್ಟ್ರದ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯಾಗಿದೆ. ಆದರೆ ರಾಜಕೀಯ ಕಾರಣಕ್ಕಾಗಿ ವಿರೋಧ ಪಕ್ಷಗಳು ಸುಳ್ಳು ಸುದ್ದಿ ಹಬ್ಬಿಸಿ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಮಾತನಾಡಿ, ಜವಾಹರಲಾಲ್ ನೆಹರು ಅವರು ಪ್ರಧಾನಿಯಾಗಿದ್ದ ಅವಧಿಯಲ್ಲೇ ಪೌರತ್ವ ಕಾಯ್ದೆ ಬಗ್ಗೆ ಪ್ರಸ್ತಾಪವಾಗಿತ್ತು. ನಂತರ ಕೆಲವು ತಿದ್ದುಪಡಿ ಕೂಡ ಆಗಿದೆ, ಜಾರಿಯಾದ ಕಾಯ್ದೆಯಿಂದ ಯಾರು ಭಯ ಪಡುವ ಅಗತ್ಯವಿಲ್ಲವೆಂದರು.

ಭಾರತದಲ್ಲಿರುವ ಯಾವುದೇ ಮುಸ್ಲಿಂರನ್ನು ಹೊರಗಟ್ಟುವ ಸಂಚು ಇದರ ಹಿಂದೆ ಇಲ್ಲ. ಕಾಯ್ದೆಯ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುವುದು ಬಹುಮುಖ್ಯವೆಂದು ಹೇಳಿದರು.

bommayya

ಬಿಜೆಪಿ ಅಲ್ಪಸಂಖ್ಯಾತರ ಘಟಕದ ಪ್ರಮುಖ ಮೊಯ್ದು ಮಾತನಾಡಿ, ಕೆಲವು ಪಕ್ಷ ಹಾಗೂ ಸಂಘಟನೆಗಳು ದೇಶದ ಶಾಂತಿ ಕದಡಿ ಲಾಭ ಪಡೆದುಕೊಳ್ಳುತ್ತಿದ್ದಾರೆ. ಮಂಗಳೂರು ನಡೆದ ಗಲಭೆಕೋರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪೌರತ್ವ ಕಾಯ್ದೆ ಸಂಬಂಧ ಬಿಜೆಪಿ ಹೊರತಂದಿರುವ ಭಿತ್ತಿ ಪತ್ರಗಳನ್ನು ಪ್ರದರ್ಶಿಸುವ ಮೂಲಕ ನಗರದ ಮಹದೇವಪೇಟೆಯಲ್ಲಿರುವ ಬನ್ನಿ ಮಂಟಪದ ಬಳಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚುರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಅವರುಗಳು ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ನಗರದ ಮನೆ ಮನೆಗೆ ಭೇಟಿ ನೀಡಿ ಪೌರತ್ವ ಕಾಯ್ದೆಯ ಉದ್ದೇಶದ ಬಗ್ಗೆ ನಿವಾಸಿಗಳಿಗೆ ಮನವರಿಕೆ ಮಾಡಿದರು.

ಬಿಜೆಪಿ ನಗರಾಧ್ಯಕ್ಷ್ಷ ಮನು ಮಂಜುನಾಥ್, ಮಾಜಿ ಅಧ್ಯಕ್ಷ ಮಹೇಶ್ ಜೈನಿ, ಪ್ರಮುಖರಾದ ಉಣ್ಣಿಕೃಷ್ಣನ್, ಮುರುಗೇಶ್, ಸತೀಶ್, ಶಿವಕುಮಾರ್, ಸವಿತಾ ರಾಕೇಶ್, ಅನಿತಾ ಪೂವಯ್ಯ, ಉಮೇಶ್ ಸುಬ್ರಮಣಿ, ಪಿ.ಡಿ.ಪೊನ್ನಪ್ಪ ಮತ್ತಿತರರು ಹಾಜರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English