ಬೆಂಗಳೂರು : ಮೈಸೂರಿನ ಕೃಷ್ಣ ರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೆಆರ್ಎಸ್ ಡ್ಯಾಮ್ ಸಮೀಪದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗುತ್ತಿದೆ ಎನ್ನಲಾಗುತ್ತಿದೆ. ಹೀಗಾಗಿ, ಗಣಿಗಾರಿಕೆ ನಿಲ್ಲಿಸುವಂತೆ ಸ್ಥಳೀಯರು ಒತ್ತಡ ಹೇರುತ್ತಿದ್ದಾರೆ. ಈ ವಿಚಾರವಾಗಿ ಭಾರೀ ಪ್ರತಿಭಟನೆಗಳು ಕೂಡ ನಡೆದಿವೆ. ಆದರೆ, ಗಣಿಗಾರಿಕೆ ನಿಲ್ಲುವ ಯಾವುದೇ ಲಕ್ಷಣ ಗೋಚರವಾಗುತ್ತಿಲ್ಲ.
ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗುತ್ತಿದೆ. ಹೀಗಾಗಿ ಈ ಪರಿಸರದಲ್ಲಿ ಕೂಡಲೇ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ಸಲ್ಲಿಸುವಂತೆ ಯಡಿಯೂರಪ್ಪ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೆ ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಿದರು.
ಈ ಮೊದಲು ಕೂಡ ಗಣಿಗಾರಿಕೆ ನಿಲ್ಲಿಸುವಂತೆ ಸಾಕಷ್ಟು ಆದೇಶಗಳನ್ನು ಸರ್ಕಾರ ಹೊರಡಿಸಿದೆ. ಆದಾಗ್ಯೂ, ಈ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡಿರಲಿಲ್ಲ. ಈಗ, ಮುಖ್ಯಮಂತ್ರಿಗಳೇ ಈ ಆದೇಶ ಹೊರಡಿಸಿದ್ದು, ಇನ್ನಾದರೂ ಗಣಿಗಾರಿಕೆ ನಿಲ್ಲಲಿದೆಯೇ ಎನ್ನುವ ಪ್ರಶ್ನೆ ಕಾಡಿದೆ.