ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ‘ಕನಕಪುರ ಚಲೋ’ ಪ್ರತಿಭಟನೆ : ಕಲ್ಲಡ್ಕ ಪ್ರಭಾಕರ್ ಭಟ್

12:03 PM, Monday, January 13th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

prabhakar-bhat

ರಾಮನಗರ : ಕನಕಪುರದ ಕಪಾಲ ಬೆಟ್ಟದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶಗಳು ಕೇಳಿಬಂದ ನಂತರ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಕನಕಪುರದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ಯೋಜನೆಯನ್ನು ಇಂದು ‘ಕನಕಪುರ ಚಲೋ’ ಹೆಸರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ಸದ್ಯಕ್ಕೆ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ಕಾಮಗಾರಿ ಸ್ಥಗಿತಗೊಂಡಿದ್ದು, ಎಲ್ಲ ಕೆಲಸಗಾರರು ಅಲ್ಲಿಂದ ಬೇರೆಡೆ ಹೋಗಿದ್ದಾರೆ. ಅಲ್ಲದೆ, ಈ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಿಸುವ ಬಗ್ಗೆ ವಿವಾದ ಉಂಟಾದ ಕಾರಣ ಸುತ್ತಲೂ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇಂದು ನಡೆಯುವ ಕನಕಪುರ ಚಲೋ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಭಾಗಿಯಾಗಲಿದ್ದಾರೆ. ಹಲವು ಹಿಂದೂಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿವೆ.

ಕಪಾಲಬೆಟ್ಟ ಅಭಿವೃದ್ಧಿ ಸಮಿತಿಗೆ ಮಂಜೂರಾಗಿದ್ದ 10 ಎಕರೆ ಜಾಗದಲ್ಲಿ ಒಂದು ಧರ್ಮದ ದೇವರ ಪ್ರತಿಮೆ ನಿರ್ಮಾಣ ಮಾಡಿರುವುದು ವಿವಾದಕ್ಕೆ ಕಾರಣವಾಗಿತ್ತು. ಕ್ರಿಸ್ಮಸ್ ವೇಳೆ ಅದರ ಶಂಕುಸ್ಥಾಪನೆ ನೆರವೇರಿಸಿದ್ದ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಟೀಕೆಗಳು ಕೇಳಿಬಂದಿತ್ತು. ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಏಸು ಪ್ರತಿಮೆಯ ಶಂಕುಸ್ಥಾಪನೆ ಮಾಡುವ ಮೂಲಕ ಆಡಳಿತ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು.

ಇಂದು ವಿವಿಧ ಸಂಘಟನೆಗಳಿಂದ ‘ಕನಕಪುರ ಚಲೋ’ಗೆ ಕರೆ ನೀಡಲಾಗಿದ್ದು, ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ತುಮಕೂರಿನಿಂದ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಪಾಲಬೆಟ್ಟದ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕನಕಪುರ ನಗರದಲ್ಲಿ ಬೃಹತ್ ಪ್ರತಿಭಟನೆ ಹಿನ್ನೆಲೆ ಕಪಾಲಬೆಟ್ಟ, ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ. ನಿನ್ನೆಯಿಂದಲೇ ವಾಹನಗಳನ್ನು ಚೆಕ್ ಮಾಡಿ ಕಳುಹಿಸುತ್ತಿರುವ ಪೊಲೀಸರು ಇಂದು ಕಪಾಲ ಬೆಟ್ಟಕ್ಕೆ ಹೋಗುವವರಿಗೆ ಸಂಪೂರ್ಣ ನಿಷೇಧ ಹೇರಿದ್ದಾರೆ. ಭದ್ರತೆಗೆ 1 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಎಸ್ಪಿ ಅನೂಪ್ ಶೆಟ್ಟಿ, ಸೋಮವಾರ ಪ್ರತಿಭಟನೆ ನಡೆಸಲು ಅನುಮತಿ ಕೇಳಿದ್ದಾರೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ ಪ್ರತಿಭಟನೆಗೆ ಅವಕಾಶವಿದೆ. ಪ್ರತಿಭಟನೆಯಲ್ಲಿ ಗಲಾಟೆ, ಗಲಭೆ ಮಾಡುವಂತಿಲ್ಲ. ಕಾನೂನನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಭದ್ರತೆಗಾಗಿ ಒಬ್ಬರು ಎಸ್ಪಿ, ಒಬ್ಬರು ಎಎಸ್ಪಿ, ಇಬ್ಬರು ಡಿವೈಎಸ್ಪಿ, 10 ಸಿಪಿಐ, 30 ಪಿಎಸ್ಐ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English