- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಿಜೆಪಿಗೆ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಭೋಪಾಲ್ ನಲ್ಲಿ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ

BJP [1]

ಭೋಪಾಲ್: ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಈಗಾಗಲೇ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ ನಡೆಸಿ ತಮ್ಮ ತಾಕತ್ತು ಪ್ರದರ್ಶಿಸಿದ್ದಾರೆ.

ಆದರೆ ಸಿಂಧಿಯಾ ಬಿಜೆಪಿ ಮಡಲಿಲ್ಲಿರುವುದನ್ನು ಸಹಿಸದ ಕಾಂಗ್ರೆಸ್, ಮೇಲ್ನೋಟಕ್ಕೆ ಅವರ ವಿರುದ್ಧ ಪಿತೂರಿ ನಡೆಸುತ್ತಿರುವಂತೆ ತೋರುತ್ತಿದೆ. ಸಿಂಧಿಯಾ ಬಿಜೆಒಪಿ ಸೇರಿದ ಮರುದಿನವೇ ಅವರ ವಿರುದ್ಧದ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿದ್ದು ಇದಕ್ಕೆ ಸಾಕ್ಷಿ.

ಇಷ್ಟೇ ಅಲ್ಲ ಸಿಂಧಿಯಾ ರೋಡ್ ಶೋ ವೇಳೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಯುವ ನಾಯಕನಿಗೆ ಕಪ್ಪುಬಾವುಟ ಪ್ರದರ್ಶಿಸಿದ್ದಾರೆ. ಅಲ್ಲದೇ ಸಮಾವೇಶದ ಸ್ಥಳದತ್ತ ಹೊರಟಿದ್ದ ಸಿಂಧಿಯಾ ಕಾರಿನ ಮೇಲೆ ದಾಳಿ ಮಾಡಿದ್ದಾರೆ.

ಸಿಂಧಿಯಾ ಅವರ ಸ್ವಾಗತಕ್ಕೆ ಭರ್ಜರಿ ಸಮಾವೇಶ ಏರ್ಪಡಿಸಿದ್ದ ಬಿಜೆಪಿ, ನಗರದ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ಹಮ್ಮಿಕೊಂಡಿತ್ತು. ಈ ವೇಳೆ ಸಿಂಧಿಯಾ ಅವರ ಕಾರನ್ನು ತಡೆದ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ನಾಯಕ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯ ಸರ್ಕಾರದ ಪ್ರೇರಣೆಯಿಂದಲೇ ಸಿಂಧಿಯಾ ಮೇಲೆ ದಾಳಿ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಸಿಂಧಿಯಾ ಮೇಲಿನ ದಾಳಿಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕೆಂದು ಶಿವರಾಜ್ ಸಿಂಗ್ ಚೌಹಾಣ್ ಆಗ್ರಹಿಸಿದ್ದಾರೆ.

ಇದಕ್ಕೂ ಮೊದಲು ಜ್ಯೋತಿರಾದಿತ್ಯ ಸಿಂಧಿಯಾ ಸ್ವಾಗತಕ್ಕೆ ಭೋಪಾಲ್‌ನಲ್ಲಿ ಹಾಕಲಾಗಿದ್ದ ಫ್ಲೆಕ್ಸ್‌ಗಳನ್ನು ಕಿತ್ತು ಹಾಕಿದ್ದ ಪ್ರಸಂಗವನ್ನು ಇಲ್ಲಿ ಸ್ಮರಿಸಬಹುದು.