[1]ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾ. 22ರ ರಾತ್ರಿ 9 ಗಂಟೆಯಿಂದ ಮಾ. 31ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.
ಕೋವಿಡ್- 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿಷೇಧಾಜ್ಞೆ ವೇಳೆ ಸಾರ್ವಜನಿಕರು ತುರ್ತು ಮತ್ತು ಆವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ಮನೆಗಳಿಂದ ಹೊರಬರುವುದನ್ನು ಕಡ್ಡಾಯ ವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿಯೂ ಜನ ಸೇರುವಂತಹ ಯಾವುದೇ ಕಾರ್ಯಕ್ರಮಗಳನ್ನು ಮಾಡುವುದು ನಿರ್ಬಂಧಿಸಲಾಗಿದೆ.
ಸಾಮಾಜಿಕ ಅಂತರವನ್ನು ಪಾಲಿಸುವ ದೃಷ್ಟಿಯಲ್ಲಿ ಜನಜಂಗುಳಿ ಸೇರದಂತೆ ಎಲ್ಲ ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ/ಜಾತ್ರೆಗಳನ್ನು ನಿಷೇಧಿಸಲಾಗಿದೆ. ಕಾರ್ಮಿಕರ ಆಧಾರದಲ್ಲಿ ಕಾರ್ಯ ನಿರ್ವಹಿಸುವ ಕೈಗಾರಿಕೆಗಳು ಶೇ. 50ರಷ್ಟು ಬಲದಲ್ಲಿ ರೊಟೇಶನ್ ಆಧಾರದಲ್ಲಿ ಕೆಲಸ ನಿರ್ವಹಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಎಲ್ಲ ಕ್ರಮಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ದೇವಸ್ಥಾನ, ಮಸೀದಿ, ಚರ್ಚ್ ಒಳಗೊಂಡಂತೆ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಪ್ರವೇಶಿಸಬಾರದೆಂದು ಸೂಚಿಸಲಾಗಿದೆ. ಬೇಸಗೆ, ಶಿಬಿರ, ವಿಚಾರ ಸಂಕಿರಣಗಳು, ವಸ್ತು ಪ್ರದರ್ಶನಗಳು, ಸಂಗೀತ ಹಬ್ಬಗಳು,ಕ್ರೀಡಾ ಚಟುವಟಿಕೆ, ಪಂದ್ಯಾಟ ಮತ್ತಿತರ ಯಾವುದೇ ಕಾರ್ಯ ಕ್ರಮಗಳನ್ನು ಆಯೋಜಿಸ ದಂತೆ ಆದೇಶಿಸಲಾಗಿದೆ. ವೈಯಕ್ತಿಕ ಕಾರಣ ಗಳಿಗಾಗಿ ಅನುಮತಿ ಕೋರಿ ಮನವಿ ಸಲ್ಲಿಸಲು ಯಾವುದೇ ಕಾರಣಕ್ಕೂ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.